ADVERTISEMENT

ಬಿಸಿಗಾಳಿ: ಮುನ್ನೆಚ್ಚರಿಕೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2023, 8:51 IST
Last Updated 20 ಏಪ್ರಿಲ್ 2023, 8:51 IST
   

ಬೆಂಗಳೂರು: ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಳ, ಬಿಸಿಗಾಳಿಯ ಕಾರಣ ಆರೋಗ್ಯ ರಕ್ಷಣೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಆರೋಗ್ಯ ಇಲಾಖೆ ತಿಳಿಸಿದೆ.

ಬಿಸಿಲಿನಿಂದ ಸುಸ್ತಾದಾಗ ಅತಿ ತಣ್ಣನೆ ನೀರಿನಿಂದ ಮೈ ಒರಸಿಕೊಳ್ಳಬಾರದು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕತಂಪು ಪಾನೀಯಗಳನ್ನು ಸೇವಿಸಬಾರದು. ಮಕ್ಕಳು ಹಾಗೂ ಸಾಕು ಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಬಳಿ ಬಿಡಬಾರದು. ಬಿಸಿಲಿನ ಸಮಯದಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಬೇಕು. ಬಿಸಿಯಾದ ಮಸಾಲೆಯುಕ್ತ ಆಹಾ ರವನ್ನು ಸೇವಿಸಬಾರದು. ಬೂಟುಗಳು ಅಥವಾ ಚಪ್ಪಲಿ ಗಳನ್ನು ಬಳಸದೆ ಹೊರಗಡೆ ಹೋಗಬಾರದು ಎಂದು ಇಲಾಖೆ ಸಲಹೆ ನೀಡಿದೆ.

ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕ, ಟೋಪಿ ಅಥವಾ ಛತ್ರಿಯನ್ನು ಬಳಸಬೇಕು. ಹಗುರವಾದ, ತಿಳಿ ಬಣ್ಣದ ಬಟ್ಟೆಗಳನ್ನು ಧರಿಸಬೇಕು. ಮನೆಯಲ್ಲಿ ತಯಾರಿಸಿದ ಲಸ್ಸಿ, ಶರಬತ್, ನಿಂಬೆ ರಸದ ನೀರು ಹಾಗೂ ಮಜ್ಜಿಗೆಯನ್ನು ಸೇವಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಕುಡಿಯಬೇಕು. ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಬಿಸಿಲಿನಲ್ಲಿ ಕೆಲಸ ಮಾಡುವುದನ್ನು ತಪ್ಪಿಸಬೇಕು ಎಂದು ಹೇಳಿದೆ.

ADVERTISEMENT

ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿಬೇಸಿಗೆಯಲ್ಲಿ ಬರಬಹುದಾದ ರೋಗಗಳ ನಿರ್ವಹಣೆಗೆ ಓಆರ್‌ಎಸ್ ಪ್ಯಾಕೇಟ್, ಐ.ವಿ. ಫ್ಲೂಯಿಡ್ ಮತ್ತು ಜೀವ ರಕ್ಷಕ ಔಷಧಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳಲಾಗುವುದು. ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಬೇಕು. ಸ್ಥಳೀಯ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷೆ ಮಾಡಬೇಕು ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.