ಬೆಂಗಳೂರು: ‘ರಾಜ್ಯದ ವಿವಿಧ ಭಾಗಗಳಲ್ಲಿ ಹೋಟೆಲ್ ಹಾಗೂ ಬೇಕರಿ ಉದ್ಯಮಿಗಳ ಮೇಲೆ ದೌರ್ಜನ್ಯ, ಕೊಲೆ, ಹಲ್ಲೆ ಸೇರಿದಂತೆ ಅಪರಾಧಿಕ ಕೃತ್ಯಗಳು ಹೆಚ್ಚುತ್ತಿವೆ. ಈ ಅಪರಾಧಿಕ ಕೃತ್ಯಗಳನ್ನು ನಿಯಂತ್ರಿಸಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ಅಧ್ಯಕ್ಷ ಜಿ.ಕೆ. ಶೆಟ್ಟಿ ಆಗ್ರಹಿಸಿದ್ದಾರೆ.
‘ಮಂಡ್ಯ ಜಿಲ್ಲೆಯ ಪ್ರವಾಸಿ ತಾಣ ಕೆಆರ್ಎಸ್ನಲ್ಲಿ ಬೇಕರಿ ಮಾಲೀಕ ಚೇತನ್ ಅವರನ್ನು ಇತ್ತೀಚೆಗೆ ರೌಡಿಗಳು ಮಾರಾಕಸ್ತ್ರಗಳಿಂದ ಇರಿದು ಕೊಲೆ ಮಾಡಿರುವ ಘಟನೆ ಹೋಟೆಲ್ ಮಾಲೀಕರಲ್ಲಿ ಆತಂಕವನ್ನು ಉಂಟುಮಾಡಿದೆ. ರೌಡಿಗಳು ಹೋಟೆಲ್ ಮತ್ತು ಬೇಕರಿ ಮಾಲೀಕರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದಾರೆ. ಉದ್ಯಮಿಗಳು ಹಣ ನೀಡದಿದ್ದರೆ ಅವರ ಮೇಲೆ ದೈಹಿಕ ಹಲ್ಲೆ ಮಾಡುತ್ತಾರೆ. ಕೊಲೆ ಬೆದರಿಕೆಯನ್ನೂ ಹಾಕುತ್ತಾರೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
‘ಹೋಟೆಲ್ ಮತ್ತು ಬೇಕರಿ ಮಾಲೀಕರು ಸ್ಥಳೀಯ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಟ್ರೇಡ್ ಪರವಾನಗಿ, ಜಿಎಸ್ಟಿ ಹೀಗೆ ನಾನಾ ರೂಪದಲ್ಲಿ ಪ್ರತಿವರ್ಷ ಕೋಟ್ಯಂತರ ರೂಪಾಯಿ ತೆರಿಗೆ ಪಾವತಿಸುತ್ತಿದ್ದಾರೆ. ಸ್ಥಳೀಯವಾಗಿ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ ಮೂಲಕ ದೇಶದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಆದರೂ ನಮ್ಮ ಜೀವಕ್ಕೆ ರಕ್ಷಣೆ ಒದಗಿಸುತ್ತಿಲ್ಲ’ ಎಂದು ದೂರಿದ್ದಾರೆ.
‘ಬೇಕರಿ ಉದ್ಯಮಿ ಚೇತನ್ ಅವರನ್ನು ಕೊಲೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಂಘದ ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಲಾಗುವುದು’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.