ADVERTISEMENT

ಬೀಗ ಮುರಿದು ಮನೆಗಳಲ್ಲಿ ಕಳವು: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2022, 18:06 IST
Last Updated 2 ಫೆಬ್ರುವರಿ 2022, 18:06 IST
ಆರೋಪಿಯಿಂದ ಜಪ್ತಿ ಮಾಡಿರುವ ಚಿನ್ನಾಭರಣ ಹಾಗೂ ಇತರ ವಸ್ತುಗಳು 
ಆರೋಪಿಯಿಂದ ಜಪ್ತಿ ಮಾಡಿರುವ ಚಿನ್ನಾಭರಣ ಹಾಗೂ ಇತರ ವಸ್ತುಗಳು    

ಬೆಂಗಳೂರು: ಬೀಗ ಹಾಕಿರುತ್ತಿದ್ದ ಮನೆಗಳನ್ನು ಗುರುತಿಸಿ ಯಾರೂ ಇಲ್ಲದ ಹೊತ್ತಿನಲ್ಲಿ ಮನೆಗೆ ನುಗ್ಗಿ ಹಣ, ಆಭರಣ ಹಾಗೂ ಇತರ ವಸ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗುತ್ತಿದ್ದ ಆರೋಪಿಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ನತೀಬ್‌ ಅಹ್ಮದ್‌ (34) ಬಂಧಿತ. ಈತನಿಂದ 5 ಗ್ರಾಂ ತೂಕದ ಚಿನ್ನದ ಉಂಗುರ, 80 ಗ್ರಾಂ ತೂಕದ ಬೆಳ್ಳಿಯ ಆಭರಣಗಳು, 6 ಕೈಗಡಿಯಾರಗಳು, 1 ಎಲ್‌ಇಡಿ ಟಿವಿ, 1 ಹೋಮ್‌ ಥಿಯೇಟರ್‌ ಹಾಗೂ ಎರಡು ಸೀರೆಗಳನ್ನು ಜಪ್ತಿ ಮಾಡಲಾಗಿದೆ. ಇವುಗಳ ಒಟ್ಟು ಮೌಲ್ಯ ₹1.20 ಲಕ್ಷ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ಜನವರಿ 28ರಂದು ಬೆಳಿಗ್ಗೆ 8.30ರ ಸುಮಾರಿಗೆ ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಊರಿಗೆ ತೆರಳಿದ್ದರು. ಇದನ್ನು ಗಮನಿಸಿದ್ದ ಆರೋಪಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದ. ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ್ದ ನೆರೆಮನೆಯವರು ದೂರವಾಣಿ ಕರೆ ಮಾಡಿ ವ್ಯಕ್ತಿಗೆ ವಿಷಯ ತಿಳಿಸಿದ್ದರು. ಅವರು ಮನೆಗೆ ಬಂದು ನೋಡಿದಾಗ ಚಿನ್ನಾಭರಣ ಹಾಗೂ ಇತರ ವಸ್ತುಗಳು ಕಳವು ಆಗಿರುವುದು ಗಮನಕ್ಕೆ ಬಂದಿತ್ತು’ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.