
ಬಂಧನ
ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳ್ಳತನ ಮಾಡಿದ ಯುವತಿಯನ್ನು ಕೋಣನ ಕುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ದೀಪಾ (28) ಎಂಬಾಕೆಯನ್ನು ಬಂಧಿಸಿ, 206 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
‘ಕೋಣನಕುಂಟೆ ನಿವಾಸಿ ಜಗದೀಶ್ ಎಂಬುವರ ಮನೆಯಲ್ಲಿ ಎಂಟು ತಿಂಗಳಿಂದ ದೀಪಾ ಕೆಲಸ ಮಾಡುತ್ತಿದ್ದು, ದೊಡ್ಡಕಲ್ಲಸಂದ್ರದಲ್ಲಿ ವಾಸವಾಗಿದ್ದಳು. ಜಗದೀಶ ಅವರ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಹಂತ–ಹಂತವಾಗಿ ಕಳವು ಮಾಡಿದ್ದಳು’ ಎಂದು ಪೊಲೀಸರು ತಿಳಿಸಿದ್ದಾರೆ.
‘ಫೆಬ್ರುವರಿ 2ರಂದು ಜಗದೀಶ್ ಕುಟುಂಬ ಸದಸ್ಯರು ಕಬೋರ್ಡ್ನಲ್ಲಿ ಇರಿಸಿದ್ದ ಚಿನ್ನಾಭರಣ ನೋಡಿದಾಗ ನಾಪತ್ತೆಯಾಗಿರುವುದು ಕಂಡು ಬಂದಿದೆ. ದೀಪಾಳನ್ನು ಪ್ರಶ್ನಿಸಿದಾಗ ಗೊಂದಲದ ಉತ್ತರ ನೀಡಿದ್ದಳು. ಅನುಮಾನದ ಮೇಲೆ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಬಳಿಕ, ಆಭರಣ ಅಂಗಡಿಯಲ್ಲಿ ಅಡಮಾನ ಇರಿಸಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದೂ ತಿಳಿಸಿದ್ದಾರೆ.
‘ಕದ್ದ ಚಿನ್ನಾಭರಣಗಳನ್ನು ಅಡಮಾನ ಇರಿಸಿ ಪಡೆದ ಹಣದಲ್ಲಿ ತಮಿಳುನಾಡಿನಲ್ಲಿ ನಿವೇಶನ ಖರೀದಿಸಿದ್ದಾಳೆ ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.