ಬೆಂಗಳೂರು: ಪಶ್ಚಿಮಘಟ್ಟದಲ್ಲಿ ಹಾದು ಹೋಗುವ ಹುಬ್ಬಳ್ಳಿ– ಅಂಕೋಲಾ ರೈಲು ಮಾರ್ಗಕ್ಕೆ ವನ್ಯಜೀವಿ ಮಂಡಳಿಯಕೆಲವು ಸದಸ್ಯರ ವಿರೋಧದ ನಡುವೆಯೂ ಶುಕ್ರವಾರ ಒಪ್ಪಿಗೆ ನೀಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು ಈ ಯೋಜನೆಯ ಅನಮೋದನೆಗೆ ಪಟ್ಟು ಹಿಡಿದರು ಎಂದು ಮೂಲಗಳು ತಿಳಿಸಿವೆ.
ಮಾರ್ಚ್ 9 ರಂದು ನಡೆದ 13 ನೇ ಸಭೆಯಲ್ಲಿ ಸದಸ್ಯರ ವಿರೋಧದಿಂದ ಪ್ರಸ್ತಾವಕ್ಕೆ ಮಂಡಳಿ ಒಪ್ಪಿಗೆ ನೀಡಿರಲಿಲ್ಲ. ಅಧಿವೇಶನದಲ್ಲಿ ಉತ್ತರ ಕರ್ನಾಟಕ ಮತ್ತು ಉತ್ತರಕನ್ನಡ ಜಿಲ್ಲೆಯ ಶಾಸಕರು ಈ ಯೋಜನೆ ಅನುಷ್ಠಾನಕ್ಕೆ ಒತ್ತಡ ಹೇರಿದ್ದರು.
ಈ ಹಿನ್ನೆಲೆಯಲ್ಲೇ ವನ್ಯಜೀವಿ ಮಂಡಳಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಸಚಿವ ಜಗದೀಶ ಶೆಟ್ಟರ್ ಅವರೇ ಯೋಜನೆಗೆ ಸಂಬಂಧಿಸಿದ ಅಂಕಿ–ಅಂಶಗಳನ್ನು ಮುಂದಿಟ್ಟು ಮುಖ್ಯಮಂತ್ರಿಯವರ ಮನವೊಲಿಸುವ ಪ್ರಯತ್ನ ನಡೆಸಿದರು. ‘ಯೋಜನೆಯಿಂದ ನಷ್ಟವಾಗಬಹುದಾದ ಅರಣ್ಯಕ್ಕೆಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ಪರ್ಯಾಯಗಳನ್ನು ಸೂಚಿಸಿದ್ದಾರೆ. ಅದನ್ನು ಪಾಲಿಸುವುದಕ್ಕೆ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ’ ಎಂದು ಶೆಟ್ಟರ್ ವಿವರಿಸಿದರು. ಇವರಿಗೆ ದೇಶಪಾಂಡೆ ಮತ್ತು ಶಿವರಾಮ ಹೆಬ್ಬಾರ್ ಧ್ವನಿಗೂಡಿಸಿದರು.
ಯೋಜನೆಗೆ ಸದಸ್ಯರ ವಿರೋಧ
ಸಭೆಯಲ್ಲಿ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಇವತ್ತಿನ ಸಭೆಯಲ್ಲಿ ಮೌನತಳೆದಿದ್ದರು. ಕಳೆದ ಸಭೆಯಲ್ಲಿ ಯೋಜನೆಯನ್ನು ವಿರೋಧಿಸಿದ್ದ ಅರಣ್ಯ ಸಚಿವ ಆನಂದಸಿಂಗ್ ಗೈರಾಗಿದ್ದರು. ವನ್ಯಜೀವಿ ಮಂಡಳಿ ಸದಸ್ಯರಾದ ಮಲ್ಲೇಶಪ್ಪ, ಡಾ.ಶಿವಪ್ರಕಾಶ್, ಸಂಜಯ್ ಗುಬ್ಬಿ ವಿರೋಧಿಸಿದರು ಎಂದೂ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.