ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಹುಳಿಮಾವು ವಾರ್ಡ್ನ ಕೆಲ ಪ್ರದೇಶಗಳನ್ನು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಸೇರ್ಪಡೆ ಮಾಡಿರುವುದನ್ನು ಪ್ರಶ್ನಿಸಲಾದ ಮೇಲ್ಮನವಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಸತೀಶ್ ರೆಡ್ಡಿ ಸೇರಿ ಆರು ಜನರು ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಮೇಲ್ಮನವಿದಾರರ ಪರ ವಕೀಲರು, ‘ಬಿಬಿಎಂಪಿ ಕಾಯ್ದೆಯ ಕಲಂ 7(1) (ಬಿ) ಪ್ರಕಾರ ಒಂದು ವಾರ್ಡ್ಗೆ ಸೇರಿದ ಪ್ರದೇಶಗಳನ್ನು ವಿಧಾನಸಭೆ ಚುನಾವಣಾ ಕ್ಷೇತ್ರದೊಳಗೇ ಸೇರಿಸಬೇಕು. ಆದರೆ, ಹುಳಿಮಾವು ವಾರ್ಡ್ನ ಕೆಲ ಪ್ರದೇಶಗಳನ್ನು ಬೊಮ್ಮನಹಳ್ಳಿ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಹಂಚಿಕೆ ಮಾಡಿರುವುದು ಸರಿಯಲ್ಲ. ಇದರಿಂದಮತದಾರರಿಗೆ ಗೊಂದಲ ಉಂಟಾಗ
ಲಿದೆ. ಈ ಸಂಬಂಧ ವಾರ್ಡ್ ಮರುವಿಂಗಡಣೆಯನ್ನು ಮರು ಪರಿಶೀಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಲಾಗಿದ್ದ ರಿಟ್ ಅರ್ಜಿಯನ್ನು ಏಕಸದಸ್ಯ ಪೀಠ ಮಾನ್ಯ ಮಾಡಿಲ್ಲ’ ಎಂಬುದನ್ನು ನ್ಯಾಯ
ಪೀಠದ ಗಮನಕ್ಕೆ ತಂದರು.
ವಾದ ಆಲಿಸಿದ ನ್ಯಾಯಪೀಠ, ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತರು, ರಾಜ್ಯ ಚುನಾವಣಾ ಆಯೋಗ ಸೇರಿದಂತೆ ಆರು ಜನ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.
‘ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಹುಳಿಮಾವು ಸೇರಿ ಈ ಹಿಂದೆಇದ್ದ 14 ವಾರ್ಡ್ಗಳ ಜತೆಗೆ ಹೆಚ್ಚುವರಿ
ಯಾಗಿ 6 ವಾರ್ಡ್ಗಳನ್ನು ಸೇರ್ಪಡೆ ಮಾಡಲಾಗಿದೆ. ಆದರೆ, ಹುಳಿಮಾವು ವಾರ್ಡ್ಗೆ ಸೇರಿದ ಅಕ್ಷಯ ಗಾರ್ಡನ್, ಸತ್ಯಸಾಯಿ, ಶಿರಡಿ ಸಾಯಿ ನಗರ, ವಿಐಪಿ ಲೇ ಔಟ್ ಮತ್ತಿತರೆ ಪ್ರದೇಶಗಳನ್ನು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದೊಂದಿಗೆ ಹಂಚಿಕೆ ಮಾಡಲಾಗಿದೆ’ ಎಂಬುದು ಅರ್ಜಿದಾರರ ಆಕ್ಷೇಪ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.