ಬೆಂಗಳೂರು: ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಅರಣ್ಯ ಇಲಾಖೆಯು ನಮ್ಮ ಅರಣ್ಯ ಹಕ್ಕುಗಳು ಹಾಗೂ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎಂದು ನಾಗರಹೊಳೆ ಆದಿವಾಸಿ ಜಮ್ಮ–ಪಾಳೆ ಹಕ್ಕು ಸ್ಥಾಪನಾ ಸಮಿತಿ ಆರೋಪಿಸಿದೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ತಿಮ್ಮ ಜೆ.ಕೆ., ‘ಜೇನು ಕುರುಬ, ಬೆಟ್ಟ ಕುರುಬ, ಯರವ ಮತ್ತು ಪಣಿಯ ಆದಿವಾಸಿ ಜನರು ಅರಣ್ಯದಲ್ಲಿ ವಾಸ ಮಾಡುತ್ತಿದ್ದೇವೆ. ಆದರೆ ಅರಣ್ಯ ಇಲಾಖೆಯವರು ನಮ್ಮ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ನಾಗರಹೊಳೆ ಕಾಡಿನೊಳಗೆ ಮತ್ತು ಹೊರಗೆ ವಾಸಿಸುವ ಆದಿವಾಸಿಗಳ ಮೇಲೆ ಹುಲಿ ಸಂರಕ್ಷಣೆಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದಾರೆ’ ಎಂದು ದೂರಿದರು.
‘ಅರಣ್ಯ ಚೆಕ್ ಪೋಸ್ಟ್ಗಳನ್ನು ನಿರ್ಮಿಸುವ ಮೂಲಕ ನಮ್ಮ ಮನೆಗಳಿಗೆ ತೆರಳುವುದಕ್ಕೆ ನಿರ್ಬಂಧಿಸುತ್ತಿದ್ದಾರೆ. ಅರಣ್ಯ ಉತ್ಪನ್ನಗಳ ಸಂಗ್ರಹಣೆಯಲ್ಲಿ ನಿರ್ಬಂಧ ವಿಧಿಸುತ್ತಿದ್ದಾರೆ. ಆದ್ದರಿಂದ ಅರಣ್ಯ ಹಕ್ಕು ಕಾಯ್ದೆ–2006ಅನ್ನು ಜಾರಿಗೊಳಿಸಬೇಕು. ನಮ್ಮ ಸಮುದಾಯದವರನ್ನು ಕಾಡಿನಿಂದ ಬಲವಂತದಿಂದ ಒಕ್ಕೆಲೆಬ್ಬಿಸಬಾರದು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.