ADVERTISEMENT

ಹುಣಸಮಾರನಹಳ್ಳಿ ಕೆರೆ: ಬಳಕೆಗೆ ಸಮರ್ಪಣೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2023, 20:58 IST
Last Updated 27 ಜುಲೈ 2023, 20:58 IST
ಹುಣಸಮಾರನಹಳ್ಳಿ ಕೆರೆಯನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಸಾರ್ವಜನಿಕರ ಬಳಕೆಗೆ ಸಮರ್ಪಿಸಿದರು.
ಹುಣಸಮಾರನಹಳ್ಳಿ ಕೆರೆಯನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಸಾರ್ವಜನಿಕರ ಬಳಕೆಗೆ ಸಮರ್ಪಿಸಿದರು.   

ಯಲಹಂಕ: ‘ಕೆರೆ ಹಾಗೂ ಪ್ರಕೃತಿ ನಮ್ಮ ಆಸ್ತಿಯಾಗಿದ್ದು, ಇದನ್ನು ನಾವೇ ರಕ್ಷಿಸಿಕೊಳ್ಳಬೇಕು ಎಂಬ ಭಾವನೆ ಜನರಲ್ಲಿ ಮೂಡುವವರೆಗೆ ಕೆರೆಗಳ ಅಭಿವೃದ್ಧಿ ಮತ್ತು ಸಂರಕ್ಷಣೆ ಅಸಾಧ್ಯ’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅಭಿಪ್ರಾಯಪಟ್ಟರು.

‘ಲೋವ್ಸ್ ಇಂಡಿಯಾ’ ಮತ್ತು ‘ಹ್ಯಾಂಡ್ಸ್ ಆನ್’ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿರುವ ಹುಣಸಮಾರನಹಳ್ಳಿ ಕೆರೆಯನ್ನು ಸಾರ್ವಜನಿಕರ ಬಳಕೆಗೆ ಸಮರ್ಪಣೆ ಮಾಡಿದ ಸಮಾರಂಭದಲ್ಲಿ ಅವರು ಮಾತನಾಡಿದರು.

ಸುಮಾರು 22 ಎಕರೆ ವಿಸ್ತೀರ್ಣದ ಈ ಕೆರೆಯಲ್ಲಿ ಗಿಡಗಂಟಿಗಳು ಬೆಳೆದು, ತ್ಯಾಜ್ಯ ತುಂಬಿಕೊಂಡು ಜನರ ಓಡಾಟವೂ ಕಷ್ಟವಾಗಿತ್ತು. ಕೆರೆ ಅಭಿವೃದ್ಧಿ ಮಾಡಲೇಬೇಕೆಂಬ ಸಂಕಲ್ಪ ಮಾಡಿ, ನಾಲ್ಕು ವರ್ಷಗಳ ಹಿಂದೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳನ್ನು ಇಲ್ಲಿಗೆ ಕರೆತಂದು ಸಣ್ಣಮಟ್ಟದಲ್ಲಿ ಕಾಮಗಾರಿ ಆರಂಭಿಸಲಾಯಿತು. ನಂತರ ಹಂತ-ಹಂತವಾಗಿ ಅಭಿವೃದ್ಧಿಪಡಿಸಿದ್ದರಿಂದ ಇಂದು ಸುಂದರ ಕೆರೆಯಾಗಿ ಕಂಗೊಳಿಸುವುದರ ಜೊತೆಗೆ ಪ್ರಾಣಿ-ಪಕ್ಷಿಗಳ ಆವಾಸಸ್ಥಾನವಾಗಿ ಮಾರ್ಪಾಡಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಜತೆಗೆ, ಐಟಿಸಿ ಇಂಡಿಯಾ ಸಂಸ್ಥೆಯ ವತಿಯಿಂದ ಕೆರೆಯ ಸುತ್ತ 2 ಸಾವಿರ ಸಸಿಗಳನ್ನು ನೆಡಲಾಗಿದೆ ಎಂದು ಮಾಹಿತಿ ನೀಡಿದರು.

ಕೆರೆಯಲ್ಲಿ ಅಧಿಕ ಪ್ರಮಾಣದ ನೀರು ಸಂಗ್ರಹಣೆಗೆ ವ್ಯವಸ್ಥೆ ಮಾಡಲಾಗಿದೆ. ಕೆರೆಯ ಸುತ್ತಲೂ ನಡಿಗೆ ಪಥ, ಬೆಂಚುಗಳು, ತಂತಿಬೇಲಿ ಅಳವಡಿಕೆ, ಏರಿಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.