ADVERTISEMENT

ಐಎಎಸ್‌ ಅಧಿಕಾರಿಗಳೇ ಆಡಳಿತಾಧಿಕಾರಿಗಳು

ಬೆಂಗಳೂರಿನಲ್ಲಿ ನೃಪತುಂಗ ವಿಶ್ವವಿದ್ಯಾಲಯ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2020, 21:30 IST
Last Updated 9 ಡಿಸೆಂಬರ್ 2020, 21:30 IST

ಬೆಂಗಳೂರು: ದೂರ ಶಿಕ್ಷಣವನ್ನು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಸೀಮಿತಗೊಳಿಸುವ ಮತ್ತು ಮೂರು ಹೊಸ ವಿಶ್ವವಿದ್ಯಾಲಯಗಳಿಗೆ ಐಎಎಸ್‌ ಅಧಿಕಾರಿಗಳನ್ನು ಆಡಳಿತಾಧಿಕಾರಿ ಹಾಗೂ ಕುಲಸಚಿವರನ್ನಾಗಿ ನೇಮಿಸುವ ಅಂಶಗಳೂ ಸೇರಿ ಉನ್ನತ ಶಿಕ್ಷಣ ಸುಧಾರಣೆಗೆ ಸಂಬಂಧಿಸಿದ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದೆ.

ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಬುಧವಾರ ‘ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ)ಮಸೂದೆ–2020’ ಅನ್ನು ಮಂಡಿಸಿದರು.

ಮಸೂದೆಯ ಪ್ರಮುಖ ಅಂಶಗಳು:

ADVERTISEMENT

* ಈ ಮೊದಲು ದೂರಶಿಕ್ಷಣವು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿಯೂ ಲಭ್ಯವಿತ್ತು. ಇನ್ನು ಮುಂದೆ ದೂರ ಶಿಕ್ಷಣ ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ವತಿಯಿಂದ ಮಾತ್ರ ನೀಡಲಾಗುತ್ತದೆ. ಉಳಿದ ಯಾವುದೇ ವಿಶ್ವವಿದ್ಯಾಲಯಗಳು ದೂರ ಶಿಕ್ಷಣ ನೀಡುವುದಿಲ್ಲ

* ಬೆಂಗಳೂರಿನಲ್ಲಿ ಕೇಂದ್ರ ಸ್ಥಾನ ಹೊಂದಿರುವ ಸರ್ಕಾರಿ ವಿಜ್ಞಾನ ಕಾಲೇಜನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪ್ರತ್ಯೇಕಗೊಳಿಸಿ ಏಕಾತ್ಮಕ ಸ್ವರೂಪದ ನೃಪತುಂಗ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುತ್ತಿದ್ದು, ಇದರ ಕೇಂದ್ರ ಸ್ಥಾನವು ಬೆಂಗಳೂರು ನಗರದಲ್ಲೇ ಇರುತ್ತದೆ

*ಗುಣಮಟ್ಟದ ಶಿಕ್ಷಣ ಮತ್ತು ಸಂಪ
ನ್ಮೂಲ ಕೊರತೆ ಆಗದಂತೆ ಎಲ್ಲ ವಿಶ್ವವಿದ್ಯಾಲಯಗಳಿಗೆ ಆದಾಯ ತೆರಿಗೆ ವಿನಾಯಿತಿ ಪ್ರಯೋಜನ ಪಡೆದುಕೊಳ್ಳಲು ಅವಕಾಶ ನೀಡಲಾಗು
ವುದು. ಇದರಿಂದ ಎಲ್ಲ ವಿಶ್ವವಿದ್ಯಾಲಯಗಳಿಗೂ ಆರ್ಥಿಕ ಬಲ ಸಿಗಲಿದೆ

*ಮಹಾರಾಣಿ ಕ್ಲಸ್ಟರ್‌, ಬೆಂಗಳೂರು ಮತ್ತು ಮಂಡ್ಯ ಏಕೀಕೃತ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳನ್ನು ಸರ್ಕಾರದಿಂದಲೇ ನೇಮಕ ಮಾಡಲಾಗುವುದು. ಎಲ್ಲ ವಿಶ್ವವಿದ್ಯಾಲಯಗಳಿಗೆ ಆಡಳಿತಾಧಿಕಾರಿ ಅಥವಾ ಕುಲಸಚಿವರನ್ನಾಗಿ ಐಎಎಸ್‌ ಅಥವಾ ಕೆಎಎಸ್‌ ಅಧಿಕಾರಿಗಳನ್ನು ನೇಮಕ ಮಾಡಲು ಅವಕಾಶ ಕಲ್ಪಿಸಲಾಗಿದೆ

*ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಹೆಸರನ್ನು ‘ಬೆಂಗಳೂರು ನಗರ ವಿಶ್ವವಿದ್ಯಾಲಯ’ ಎಂದು ಮರು ನಾಮಕರಣ ಮಾಡುವುದು

* ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡುವ ಲೆಕ್ಕಪತ್ರ ನಿಯಂತ್ರಕರ ಪದನಾಮವನ್ನು ‘ಪ್ರಧಾನ ನಿರ್ದೇಶಕರು, ಕರ್ನಾಟಕ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ’ ಎಂದು ಬದಲಿಸಲಾಗಲಿದೆ

ಈ ಹಿಂದೆಯೇ ಸುಗ್ರೀವಾಜ್ಞೆ ಜಾರಿಗೆ ತರುವ ಮೂಲಕ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿರುವ ಬಹುತೇಕ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಮಹಾರಾಣಿ ಕ್ಲಸ್ಟರ್‌, ರಾಯಚೂರು, ಬೆಂಗಳೂರು-ಮಂಡ್ಯ ಏಕೀಕೃತ ವಿವಿಗಳಿಗೆ ಕುಲಪತಿಗಳನ್ನು ನೇಮಕ ಮಾಡಲಾಗಿತ್ತು. ಆದರೆ, ಈ ವಿಶ್ವವಿದ್ಯಾಲಯಗಳಿಗೆ ಕುಲಸಚಿವರು ಹಾಗೂ ಆಡಳಿತಾಧಿಕಾರಿಗಳನ್ನು ಸರಕಾರ ನೇಮಕ ಮಾಡಬೇಕಿದೆ. ಉನ್ನತ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಇನ್ನು ಮುಂದೆ ಹೆಚ್ಚು ಶಕ್ತಿ ಬರಲಿದೆ ಎಂದು ಅಶ್ವತ್ಥನಾರಾಯಣ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.