ADVERTISEMENT

ಐಎಎಸ್ ಅಧಿಕಾರಿಗಳ ಸಂಘದ ಕಟ್ಟಡ ಒಡೆಯಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 5 ಜುಲೈ 2022, 20:03 IST
Last Updated 5 ಜುಲೈ 2022, 20:03 IST

ಬೆಂಗಳೂರು: ನಕ್ಷೆ ಮಂಜೂರಾತಿ ಪಡೆಯದೆ ಇನ್‌ಫ್ಯಾಂಟ್ರಿ ರಸ್ತೆಯಲ್ಲಿ ಐಎಎಸ್ ಅಧಿಕಾರಿಗಳ ಸಂಘ ಕಟ್ಟಿರುವ ಕಟ್ಟಡ ಒಡೆಯುವಂತೆ ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ದೂರು ನೀಡಿದ್ದಾರೆ.

‘ಮಾಹಿತಿ ಹಕ್ಕು ಕಾಯ್ದೆ ಅಡಿ ಬಿಬಿಎಂಪಿ ಅಧಿಕಾರಿಗಳೇ ನೀಡಿರುವ ಮಾಹಿತಿ ಪ್ರಕಾರ, ಐಎಎಸ್‌ ಅಧಿಕಾರಿಗಳ ಸಂಘದ ಕಟ್ಟಡಕ್ಕೆ ನಕ್ಷೆ ಮಂಜೂರಾತಿ ಅಥವಾ ಕಾಮಗಾರಿ ಆರಂಭಿಕ ಪ್ರಮಾಣಪತ್ರವನ್ನು(ಸಿ.ಸಿ) ಪಾಲಿಕೆ ನೀಡಿಲ್ಲ. ಆದರೆ, ಕಾನೂನುಬಾಹಿರವಾಗಿ ನಿರ್ಮಿಸುವ ಕಟ್ಟಡದ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ದೂರಿದ್ದಾರೆ.

‘ನಕ್ಷೆ ಉಲ್ಲಂಘಿಸಿ ಬಡವರು ಕಟ್ಟಿದ ಮನೆಗಳನ್ನು ಬಿಬಿಎಂಪಿ ಮುಲಾಜಿಲ್ಲದೆ ತೆರವುಗೊಳಿಸುತ್ತದೆ. ಐಎಎಸ್ ಅಧಿಕಾರಿಗಳೇ ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ಹಿಂಜರಿಕೆ ಏಕೆ’ ಎಂದು ಪ್ರಶ್ನಿಸಿದ್ದಾರೆ.

ADVERTISEMENT

‘ಕಾನೂನುಬಾಹಿರ ಕಟ್ಟಡವನ್ನು ಕೂಡಲೇ ತೆರವುಗೊಳಿಸಬೇಕು ಮತ್ತು ಕಟ್ಟಡ ಕಟ್ಟಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ. ‘ಬಿಬಿಎಂಪಿ ಮುಖ್ಯ ಆಯುಕ್ತರು, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿ, ರಾಜ್ಯಪಾಲರು, ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅವರಿಗೂ ದೂರಿನ ಪ್ರತಿ ಸಲ್ಲಿಸಲಾಗಿದೆ’ ಎಂದು ನರಸಿಂಹಮೂರ್ತಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.