ADVERTISEMENT

ಐಎಎಸ್ ಅಧಿಕಾರಿಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2020, 20:32 IST
Last Updated 13 ಫೆಬ್ರುವರಿ 2020, 20:32 IST
   

ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ ಅವರನ್ನು ಮಾಹಿತಿ, ಜೈವಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಜತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಭೂಮಾಪನ ಇಲಾಖೆ ಆಯುಕ್ತ ಮನೀಶ್‌ ಮೌದ್ಗಿಲ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಟಿ.ಎಚ್.ಎಂ.ಕುಮಾರ್ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರನ್ನಾಗಿ, ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ ಅವರನ್ನು ಕರ್ನಾಟಕ ಕಟ್ಟಡ ಹಾಗೂ ಇತರ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿ ಕಾರ್ಯದರ್ಶಿಯನ್ನಾಗಿ, ಪಿ.ವಸಂತ ಕುಮಾರ್ ಅವರನ್ನು ಮೈಷುಗರ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ADVERTISEMENT

ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತ ಕೆ.ವಿ.ತ್ರಿಲೋಕ ಚಂದ್ರ ಅವರಿಗೆಭೂಮಾಪನ ಇಲಾಖೆ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ಪೊಲೀಸ್ ವರ್ಗ: ‘ಶಿಫಾರಸು ನಿರ್ಲಕ್ಷ್ಯ’

‘ಪೊಲೀಸರ ವರ್ಗಾವಣೆಯಲ್ಲಿ ವಿಧಾನಸಭೆ‌, ವಿಧಾನ ಪರಿಷತ್‌ ಸದಸ್ಯರು ಮತ್ತು ಸಂಸದರು ನೀಡುವ ಶಿಫಾರಸು ಪತ್ರಗಳನ್ನು ಪರಿಗಣಿಸುವುದಿಲ್ಲ’ ಎಂದು ರಾಜ್ಯ ಪೊಲೀಸ್ ಸಿಬ್ಬಂದಿ ನೇಮಕಾತಿ ಮಂಡಳಿ ಮುಖ್ಯಸ್ಥರೂ ಆದ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರಿ ವಕೀಲರು, ಪ್ರವೀಣ್ ಸೂದ್ ಅವರ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

‘ಪೊಲೀಸ್ ವರ್ಗಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮತ್ತು ಪ್ರಕಾಶ್ ಸಿಂಗ್ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಕಡ್ಡಾಯವಾಗಿ ಪಾಲಿಸಲಾಗುವುದು’ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

‘ಈ ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ನಿಯಮ ಬಾಹಿರವಾಗಿ ಶಿಫಾರಸು ಮಾಡಿರುವ 24 ಜನಪ್ರತಿನಿಧಿಗಳ ವಿರುದ್ಧ ಎಸ್‌ಐಟಿ ತನಿಖೆಗೆ ಆದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ. ಈ ಕುರಿತ ವಿಚಾರಣೆಯನ್ನು ಮಾರ್ಚ್ 3ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.