
ಬೆಂಗಳೂರು: ಅಕ್ರಮ ಶಸ್ತ್ರಾಸ್ತ್ರ ಸರಬರಾಜು ಜಾಲ ಪತ್ತೆ ಹಚ್ಚಿರುವ ಸಿಸಿಬಿ ಪೊಲೀಸರು, ಹೊರ ರಾಜ್ಯದ ವ್ಯಕ್ತಿ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಸೈಯದ್ ಮಸೂದ್ (26), ಭೋಪಾಲ್ನ ಜಾವೇದ್ ಆಲಂ (19) ಅವರನ್ನು ಬಂಧಿಸಿ, ಒಂದು ಕಂಟ್ರಿಮೇಡ್ ಪಿಸ್ತೂಲ್, 50 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹೊರ ರಾಜ್ಯದಿಂದ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ನಗರದ ವ್ಯಕ್ತಿಯೊಬ್ಬರು ತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ, ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ. ಯಾವುದೇ ಪರವಾನಗಿ ಇಲ್ಲದೆ ಶಸ್ತ್ರಾಸ್ತ್ರಗಳನ್ನು ತರಿಸಿಕೊಳ್ಳಲಾಗಿತ್ತು ಎಂಬುದು ತನಿಖೆಯಿಂದ ತಿಳಿದು ಬಂದಿದೆ.
‘ಕುರಿ ವ್ಯಾಪಾರ ಮಾಡಿಕೊಂಡಿರುವ ಸೈಯದ್ ಮಸೂದ್ ಸ್ವಯಂ ರಕ್ಷಣೆಗಾಗಿ ಪಿಸ್ತೂಲ್ ತರಿಸಿಕೊಂಡಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಆದರೆ, ಆತ ನೀಡಿರುವ ಉತ್ತರ ಸಮಾಧಾನವಾಗಿಲ್ಲ. ಯಾವ ಕಾರಣಕ್ಕೆ ತರಿಸಿಕೊಂಡಿದ್ದಾನೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಇಬ್ಬರ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಜಾವೇದ್ಗೆ ಪಿಸ್ತೂಲ್ ನೀಡಿದವರು ಯಾರು ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.