ADVERTISEMENT

ಐಎಂಎ ವಂಚನೆ ಪ್ರಕರಣದ ತನಿಖೆ: ಐಪಿಎಸ್‌ ಅಧಿಕಾರಿ ಹಿಲೋರಿ ವಿಚಾರಣೆ ನಾಳೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2019, 19:33 IST
Last Updated 31 ಜುಲೈ 2019, 19:33 IST

ಬೆಂಗಳೂರು:‌ ಪೂರ್ವ ವಲಯದ ಡಿಸಿಪಿ ಆಗಿದ್ದ ಅಜಯ್‌ ಹಿಲೋರಿ ಅವರನ್ನು ಎಸ್‌ಐಟಿ ಅಧಿಕಾರಿಗಳು ಐಎಂಎ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲಿದ್ದಾರೆ.

ಈ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿಯೊಬ್ಬರ ವಿಚಾರಣೆ ನಡೆಯುತ್ತಿರುವುದು ಇದೇ ಮೊದಲು. ಸದ್ಯ, ನಗರ ಸಶಸ್ತ್ರ ಪಡೆಯ ಒಂದನೇ ಬೆಟಾಲಿಯನ್‌ ಕಮಾಂಡೆಂಟ್‌ ಆಗಿರುವ ಹಿಲೋರಿ ಅವರಿಗೆ ಆಗಸ್ಟ್‌ 2ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ.

ಅಲ್ಲದೆ, ಪುಲಕೇಶಿ ನಗರದ ಎಸಿಪಿ ಆಗಿದ್ದ ಎಸ್‌. ರಮೇಶ್‌ ಕುಮಾರ್‌ ಹಾಗೂ ಕಮರ್ಷಿಯಲ್‌ ಸ್ಟ್ರೀಟ್‌ ‍ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಆಗಿದ್ದ ಎಂ. ರಮೇಶ್‌ ಅವರಿಗೂ ನೋಟಿಸ್‌ ಕೊಟ್ಟಿದ್ದು, ಕ್ರಮವಾಗಿ ಆಗಸ್ಟ್ 4 ಹಾಗೂ 6ರಂದು ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ.

ADVERTISEMENT

ಐಎಂಎ ಅಕ್ರಮ ಕುರಿತು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ, ಮಾರುಕಟ್ಟೆ ಗುಪ್ತಚರ ವಿಭಾಗ ಕೆಲವು ದಾಖಲೆ ನೀಡಿದ್ದರೂ, ಡಿಸಿಪಿ ಕ್ಲೀನ್‌ಚಿಟ್‌ ನೀಡಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೆ, ‘ಮನ್ಸೂರ್‌ ಖಾನ್‌ ಒಡೆತನದ ಕಂಪನಿಗಳ ವ್ಯವಹಾರ ಕಾನೂನುಬದ್ಧವಾಗಿ ನಡೆಯುತ್ತಿದೆ’ ಎಂದು ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸರೂ ಹೇಳಿದ್ದರು. ಈ ಬಗ್ಗೆ ಆರ್‌ಬಿಐ ಆಕ್ಷೇಪ ವ್ಯಕ್ತಪಡಿಸಿತ್ತು. ಬಳಿಕ ಸರ್ಕಾರ ಪ್ರಕರಣದ ಮರು ವಿಚಾರಣೆಗೆ ಆದೇಶಿಸಿತ್ತು.

ಈ ಬಗ್ಗೆ ವಿಚಾರಣೆ ನಡೆಸಿದ್ದ ಅಜಯ್‌ ಹಿಲೋರಿ ವಂಚಕ ಕಂಪನಿಗೆ ‘ಕ್ಲೀನ್‌ ಚಿಟ್‌’ ನೀಡಿ, ಹೆಚ್ಚುವರಿ ಪೊಲೀಸ್‌ ಕಮಿಷನರ್‌ (ಅಪರಾಧ) ಅವರಿಗೆ ವರದಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.