ಬೆಂಗಳೂರು: ‘ಐಎಂಎ ಸಮೂಹ’ ಕಂಪನಿ ವಿರುದ್ಧದ ವಂಚನೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಬಿಐ ಅಧಿಕಾರಿಗಳು, ಎಸ್ಐಟಿ ಮುಖ್ಯಸ್ಥ ಬಿ.ಆರ್.ರವಿಕಾಂತೇಗೌಡ ಅವರನ್ನು ಶನಿವಾರ ಭೇಟಿಯಾಗಿ ಮಾಹಿತಿ ಪಡೆದುಕೊಂಡರು.
ಕಂಪನಿಯಿಂದ ವಂಚನೆಗೀಡಾದವರು ಕಮರ್ಷಿಯಲ್ ಸ್ಟ್ರೀಟ್ ಠಾಣೆಗೆ ನೀಡಿದ್ದ ದೂರು ಆಧರಿಸಿ ಸಿಬಿಐ ಅಧಿಕಾರಿಗಳು ಶುಕ್ರವಾರ ಪ್ರತ್ಯೇಕ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಕಂಪನಿಯ ಮಾಲೀಕ ಮನ್ಸೂರ್ ಖಾನ್, ನಿರ್ದೇಶಕರು ಹಾಗೂ ಇತರರನ್ನು ಆರೋಪಿಗಳನ್ನಾಗಿ ಮಾಡಿದ್ದಾರೆ.
ತನಿಖೆಗಾಗಿ ಹೈದರಾಬಾದ್ ಹಾಗೂ ಬೆಂಗಳೂರು ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲಾಗಿದೆ. ತಂಡದ ಅಧಿಕಾರಿಗಳು, ರವಿಕಾಂತೇಗೌಡ ಮತ್ತು ಡಿಸಿಪಿ ಎಸ್.ಗಿರೀಶ್ ಅವರನ್ನು ಭೇಟಿಯಾಗಿ ಪ್ರಕರಣ ಸಂಬಂಧ ಮಾಹಿತಿ ಕಲೆಹಾಕಿದರು.
‘ಪ್ರಕರಣ ಸಂಬಂಧ ಸಂಗ್ರಹಿಸಿದ್ದ ಮಾಹಿತಿಯನ್ನು ಪುರಾವೆಗಳ ಸಮೇತ ಸಿಬಿಐ ಅಧಿಕಾರಿಗಳಿಗೆ ಹಂತ ಹಂತವಾಗಿ ನೀಡಲಾಗುತ್ತಿದೆ’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.