ಬೆಂಗಳೂರು: ಆರೋಗ್ಯಾಧಿಕಾರಿಗಳ ತಂಡವು ನಗರದ ವಿವಿಧ ಸ್ಕ್ಯಾನಿಂಗ್ ಕೇಂದ್ರಗಳಿಗೆ ಶುಕ್ರವಾರ ದಿಢೀರ್ ಭೇಟಿ ನೀಡಿದ್ದು, ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯ್ದೆ (ಪಿಸಿಪಿಎನ್ಡಿಟಿ) ಅಡಿ ದಾಖಲಾತಿಗಳನ್ನು ಸಮರ್ಪಕವಾಗಿ ನಿರ್ವಹಿಸದ ಎರಡು ಕೇಂದ್ರಗಳಿಗೆ ಬೀಗ ಹಾಕಿದೆ.
ಜಿಲ್ಲಾ ಪಿಸಿಪಿಎನ್ಡಿಟಿ ಸಕ್ಷಮ ಪ್ರಾಧಿಕಾರ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರವೀಂದ್ರನಾಥ್ ಎಂ. ಮೇಟಿ ಅವರ ನೇತೃತ್ವದಲ್ಲಿ ಅಧಿಕಾರಿಗಳು ವಿವಿಧ ಸ್ಕ್ಯಾನಿಂಗ್ ಸೆಂಟರ್ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಕಗ್ಗದಾಸಪುರದ ಎಸ್.ಎಸ್. ಲ್ಯಾಬ್ಸ್ ಆ್ಯಂಡ್ ಡಯಾಗ್ನಾಸ್ಟಿಕ್ಸ್ ಮತ್ತು ಮೆಡ್ಝೋನ್ ಡಯಾಗ್ನಾಸ್ಟಿಕ್ಸ್ ಕೇಂದ್ರವು ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸದಿರುವುದು ಕಂಡುಬಂದಿದೆ. ಇದರಿಂದ ಈ ಕೇಂದ್ರಗಳಿಗೆ ಬೀಗ ಹಾಕಿ, ಮುಚ್ಚಲಾಗಿದೆ.
ತಂಡದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ನದೀಮ್ ಅಹಮದ್, ಬೆಂಗಳೂರು ಪೂರ್ವ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಕೋಮಲ ಎಚ್.ಟಿ. ಹಾಗೂ ವಿಕಿರಣ ತಜ್ಞೆ ಡಾ. ಲೀಲಾ ಆರ್.ಪಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.