ADVERTISEMENT

ಕೆಂಪೇಗೌಡರ ಪ್ರತಿಮೆ ಉದ್ಘಾಟನೆ: ಸಂಘಟನೆಗಳ ಜತೆ ಸಚಿವರ ಸಭೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2022, 22:24 IST
Last Updated 3 ನವೆಂಬರ್ 2022, 22:24 IST
   

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇದೇ 11ರಂದು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟಿಸಲು ಬರುತ್ತಿರುವುದರಿಂದ ಒಕ್ಕಲಿಗ ಸಮುದಾಯದ ಪ್ರಮುಖ ಸಂಘ–ಸಂಸ್ಥೆಗಳ ಮುಖಂಡರ ಜತೆ ಸಚಿವರಾದ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಮತ್ತು ಆರ್. ಅಶೋಕ ಅವರು ಗುರುವಾರ ಸಭೆ ನಡೆಸಿದರು.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಚಿವದ್ವಯರು, ‘ಉದ್ದೇಶಿತ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮತ್ತು ಚಾರಿತ್ರಿಕ ರೀತಿಯಲ್ಲಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ’ ಎಂದು ತಿಳಿಸಿದರು.

‘ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರಲಿದ್ದಾರೆ. ನೀವು ಕೂಡ ಹೆಚ್ಚು ಜನರನ್ನು ಕರೆತರುವುದರ ಜತೆಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಪ್ರಧಾನಿ ಕಾರ್ಯಕ್ರಮವಾದ್ದರಿಂದ ಬಿಗಿ ಭದ್ರತಾ ವ್ಯವಸ್ಥೆ ಇರಲಿದೆ. ಸಾರ್ವಜನಿಕರು ಅಂದು 11 ಗಂಟೆಯ ವೇಳೆಗೆ ಸಮಾರಂಭದ ಸ್ಥಳವನ್ನು ತಲುಪಬೇಕು’ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಅಶ್ವತ್ಥ ನಾರಾಯಣ ಮನವಿ ಮಾಡಿದರು.

ADVERTISEMENT

'ಪ್ರತಿಮೆ ಉದ್ಘಾಟನೆಯ ಅಂಗವಾಗಿ ನಡೆಯುತ್ತಿರುವ ಪವಿತ್ರ ಮೃತ್ತಿಕಾ ಸಂಗ್ರಹಣಾ ಅಭಿಯಾನದಲ್ಲಿರುವ ರಥಗಳು ಇದೇ 9ರಂದು ಬೆಂಗಳೂರಿಗೆ ಬರಲಿವೆ. ಈ ಮೃತ್ತಿಕೆಯನ್ನು ಕೆಂಪೇಗೌಡರ ಪ್ರತಿಮೆಯ ಗೋಪುರಗಳು ಮತ್ತು ಥೀಮ್ ಪಾರ್ಕಿನಲ್ಲಿ ಬಳಸಿಕೊಳ್ಳಲಾಗುವುದು’ ಎಂದು ಅವರು ವಿವರಿಸಿದರು.

ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ವಿನಯ್ ದೀಪ್, ನಿರ್ದೇಶಕರಾದ ತಲಕಾಡು ಚಿಕ್ಕರಂಗೇಗೌಡ, ಗಂಗಹನುಮಯ್ಯ, ಹಲವು ಸಂಘಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.