ಬೆಂಗಳೂರು: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ತಲೆದೋರಿರು ಕಾರಣ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ನಗರದ ಮೆಜೆಸ್ಟಿಕ್ ಹಾಗೂ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಜತೆಗೆ ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು ಗಂಟೆ ಮೊದಲು ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣಕ್ಕೆ ತಲುಪುವಂತೆ ವಿಮಾನ ನಿಲ್ದಾಣ ಆಡಳಿತ ಮಂಡಳಿ ಮನವಿ ಮಾಡಿದೆ.
ಈ ಕುರಿತು ‘ಎಕ್ಸ್’ನಲ್ಲಿ ಮಾಹಿತಿ ನೀಡಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿ, ‘ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ಹೆಚ್ಚಿಸಲಾಗಿದೆ. ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಯಿಂದ ಭದ್ರತೆ ಒದಗಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಶಸ್ತ್ರಸಜ್ಜಿತವಾಗಿ ಭದ್ರತಾ ಪಡೆಗಳು ನಿಲ್ದಾಣದ ಸುತ್ತಮುತ್ತ ಹದ್ದಿನ ಕಣ್ಣಿಟ್ಟಿವೆ. ನಿಲ್ದಾಣಕ್ಕೆ ಬೇಗನೇ ಪ್ರಯಾಣಿಕರು ಬಂದರೆ ಚೆಕ್–ಇನ್, ಭದ್ರತಾ ತಪಾಸಣೆ ಸುಗಮವಾಗಿ ಕೈಗೊಳ್ಳಬಹುದು’ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.