ಬೆಂಗಳೂರು: ಕಾಮಗಾರಿಗಳನ್ನು ಪ್ಯಾಕೇಜ್ ಮೂಲಕ ಟೆಂಡರ್ ಆಹ್ವಾನಿಸುವ ಆದೇಶವನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು ಎಂದು ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹದೇವಸ್ವಾಮಿ ಆಗ್ರಹಿಸಿದ್ದಾರೆ.
‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರು ಟೆಂಡರ್ನಲ್ಲಿ ಭಾಗವಹಿಸದಂತೆ ಮತ್ತು ಮೀಸಲಾತಿಯಿಂದ ವಂಚಿಸಲು ಪ್ಯಾಕೇಜ್ ಮೂಲಕ ಟೆಂಡರ್ ಕರೆಯಲು ಅನುವು ಮಾಡಿಕೊಡಲಾಗಿದೆ. ಈ ಆದೇಶ ವಾಪಸ್ ಪಡೆದು ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಅವರು ಎಚ್ಚರಿಸಿದ್ದಾರೆ.
‘ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆಯಡಿ ಬಿಬಿಎಂಪಿಯಲ್ಲಿ ₹485 ಕೋಟಿ ಮೊತ್ತದ ಕಾಮಗಾರಿಗಳ ಕ್ರಿಯಾಯೋಜನೆ ಮಾರ್ಪಾಟು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕಾಮಗಾರಿಗಳ ಕೋಷ್ಠಕ –2ರಲ್ಲಿ ₹ 1 ಕೋಟಿ ಮೊತ್ತದ ಒಳಗಿನ ಕಾಮಗಾರಿಗಳಿವೆ. ಆದರೆ, ಈ ಎಲ್ಲ ಕಾಮಗಾರಿಗಳನ್ನು ಒಟ್ಟುಗೂಡಿಸಿ ಪ್ಯಾಕೇಜ್ನಲ್ಲಿ ನಿರ್ವಹಿಸಲು ಸರ್ಕಾರ ಅನುಮೋದನೆ ನೀಡಿದೆ. ಇದರಿಂದ ಟೆಂಡರ್ನಲ್ಲಿ ಸ್ಪರ್ಧೆ ಏರ್ಪಡುವುದಿಲ್ಲ. ಸರ್ಕಾರದ ಕಾಯ್ದೆಯನ್ನು ಸರ್ಕಾರವೇ ಅನುಸರಿಸದಿರುವುದು ಸಂವಿಧಾನಕ್ಕೆ ಮಾಡುವ ಅವಮಾನ’ ಎಂದು ಮಹದೇವಸ್ವಾಮಿ ದೂರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.