ADVERTISEMENT

ಸಾಮಾನ್ಯರಿಗೆ ತಲುಪದ ಆವಿಷ್ಕಾರ: ಅಶ್ವತ್ಥನಾರಾಯಣ ಬೇಸರ

​ಪ್ರಜಾವಾಣಿ ವಾರ್ತೆ
Published 20 ಜುಲೈ 2022, 19:24 IST
Last Updated 20 ಜುಲೈ 2022, 19:24 IST
ಡಾ.ಸಿ.ಎನ್‌. ಅಶ್ವತ್ಥನಾರಾಯಣ
ಡಾ.ಸಿ.ಎನ್‌. ಅಶ್ವತ್ಥನಾರಾಯಣ   

ಬೆಂಗಳೂರು: ‘ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಆವಿಷ್ಕಾರಗಳು ನಡೆಯುತ್ತಿದ್ದರೂ ಜನಸಾಮಾನ್ಯರಿಗೆ ಅದರ ಲಾಭ ದೊರೆಯುತ್ತಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಬೇಸರ ವ್ಯಕ್ತಪಡಿಸಿದರು.

ಸಾಫ್ಟ್‌ವೇರ್ ಮತ್ತು ಸೇವಾ ಸಂಸ್ಥೆಗಳ ರಾಷ್ಟ್ರೀಯ ಒಕ್ಕೂಟ (ನಾಸ್ಕಾಂ)ನಗರದಲ್ಲಿ ಬುಧವಾರ ಆಯೋಜಿಸಿದ ಹತ್ತನೇ ‘ಆರೋಗ್ಯ ವಿಜ್ಞಾನ ಮತ್ತು ಆರೋಗ್ಯ ರಕ್ಷಣೆ ತಂತ್ರಜ್ಞಾನ ಆವಿಷ್ಕಾರ ಸಮಾವೇಶ’ದಲ್ಲಿ ಭಾಗವಹಿಸಿ, ಮಾತನಾಡಿದರು.

‘ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸು
ತ್ತಿದ್ದೇವೆ. ಆರೋಗ್ಯ ಕ್ಷೇತ್ರದಲ್ಲಿಯೂ ತಂತ್ರಜ್ಞಾನ ಅಳವಡಿಕೆ ಕಾರ್ಯ ವೇಗವಾಗಿ ನಡೆಯುತ್ತಿದೆ. ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ಗುಣಮಟ್ಟದ ಆರೋಗ್ಯ ಸೇವೆ ದೊರೆಯಬೇಕೆನ್ನುವುದು ತಂತ್ರಜ್ಞಾನ ಬಳಕೆಯ ಆಶಯ. ಸರ್ಕಾರದ ಪ್ರೋತ್ಸಾಹದ ಹೊರ ತಾಗಿಯೂ ಗ್ರಾಮೀಣ ಪ್ರದೇಶಗಳ ಜನರು ಗುಣಮಟ್ಟದ ಆರೋಗ್ಯ ಸೇವೆಯಿಂದ ವಂಚಿತರಾಗುತ್ತಿ
ದ್ದಾರೆ’ ಎಂದರು.

ADVERTISEMENT

ನಾಸ್ಕಾಂ ಅಧ್ಯಕ್ಷೆ ದೇಬ್‌ ಜಾನಿ ಘೋಷ್‌, ‘ತಂತ್ರಜ್ಞಾನ ಕ್ಷೇತ್ರಕ್ಕೆ ಎಲ್ಲಿಲ್ಲದ ಮನ್ನಣೆ ದೊರೆಯುತ್ತಿದೆ. ಆದರೆ, ಇದೇ ವೇಳೆ ಜನರ ಮೂಲಭೂತ ಹಕ್ಕಾದ ಆರೋಗ್ಯದ ಕಡೆಯೂ ಗಮನ ಹರಿಸಬೇಕು. ತಂತ್ರಜ್ಞಾನ ಆವಿಷ್ಕಾರಗಳ ಲಾಭ ಪಡೆದು, ಗುಣಮಟ್ಟದ ಆರೋಗ್ಯ ಸೇವೆಯನ್ನು ಎಲ್ಲರಿಗೂ ಒದಗಿಸಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.