ಬಿಬಿಎಂಪಿ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಮುಖ್ಯ ಎಂಜಿನಿಯರ್ಗಳು ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆನ್ಸಿ(ಪಿಎಂಸಿ) ಹೆಸರಲ್ಲಿ ಲಕ್ಷಾಂತರ ರೂಪಾಯಿ ಹಣ ದೋಚುತ್ತಿದ್ದಾರೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.
ಬಿಬಿಎಂಪಿ ಆಡಳಿತಾಧಿಕಾರಿ ಎಸ್.ಆರ್. ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪತ್ರ ಬರೆದಿರುವ ಅವರು, ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳುವ ಪ್ರತಿ ಕಾಮಗಾರಿಯ ಪಿಎಂಸಿ ಕಾರ್ಯವನ್ನು ಆಯಾ ಮುಖ್ಯ ಎಂಜಿನಿಯರ್ಗಳೇ ಕಾನೂನುಬಾಹಿರವಾಗಿ ನಿರ್ವಹಿಸುತ್ತಿದ್ದಾರೆ. ಪ್ರತಿ ಕಾಮಗಾರಿಯ ಒಟ್ಟು ಮೊತ್ತದ ಶೇ 2ರಷ್ಟನ್ನು ಪಿಎಂಸಿ ಹೆಸರಲ್ಲಿ ಕಡಿತಗೊಳಿಸುತ್ತಿದ್ದಾರೆ. ಪಿಎಂಸಿ ಕೆಲಸಗಳನ್ನು ತಮ್ಮ ಸಂಬಂಧಿಕರು ಅಥವಾ ಹಿಂಬಾಲಕರ ಮೂಲಕ ನಡೆಸುತ್ತಿದ್ದಾರೆ. ಈ ಮೂಲಕ ಪ್ರತಿ ಕಾಮಗಾರಿಯಲ್ಲಿ ಲಕ್ಷಾಂತರ ರೂಪಾಯಿ ದೋಚುತ್ತಿದ್ದಾರೆ’ ಎಂದು ದೂರಿದ್ದಾರೆ.
ನಿಯಮಾನುಸಾರ ಟೆಂಡರ್ ಆಹ್ವಾನಿಸಿ ಅರ್ಹ ಸಂಸ್ಥೆಗಳಿಗಷ್ಟೇ ಪಿಎಂಸಿ ಕೆಲಸ ನೀಡುವಂತೆ ಕಟ್ಟುನಿಟ್ಟಿನ ಆದೇಶ ನೀಡಬೇಕು. 10 ವರ್ಷಗಳಿಂದ ಈ ರೀತಿಯ ಕಾನೂನುಬಾಹಿರ ಕಾರ್ಯದಲ್ಲಿ ತೊಡಗಿಕೊಂಡಿರುವ ಎಲ್ಲಾ ಮುಖ್ಯ ಎಂಜಿನಿಯರ್ಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅಕ್ರಮದ ತನಿಖೆಯನ್ನು ಸಿಐಡಿಗೆ ವಹಿಸಲು ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.