ಬೆಂಗಳೂರು: ಆದಾಯ ತೆರಿಗೆ ಅಧಿಕಾರಿ ಸೋಗಿನಲ್ಲಿ ಜ್ಯುವೆಲ್ಲರಿ ಮಳಿಗೆಗಳಿಗೆ ಹೋಗಿ ವಂಚಿಸುತ್ತಿದ್ದ ಆರೋಪದಡಿ ವಿಶಾಲ್ ಎಂಬಾತನನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ದೊಡ್ಡಬಳ್ಳಾಪುರದ ವಿಶಾಲ್, ಹಲವು ದಿನಗಳಿಂದ ಕೃತ್ಯ ಎಸಗುತ್ತಿದ್ದ. ವಂಚನೆಯಿಂದ ಬಂದ ಚಿನ್ನಾಭರಣವನ್ನು ಮಾರಾಟ ಮಾಡಲು ಬಂದಿದ್ದಾಗಲೇ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಾನೆ’ ಎಂದು ಪೊಲೀಸರು ಹೇಳಿದರು.
‘ಮಳಿಗೆಗಳಿಗೆ ಹೋಗುತ್ತಿದ್ದ ಆರೋಪಿ, ಆದಾಯ ತೆರಿಗೆ ಅಧಿಕಾರಿ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣ ಖರೀದಿಸಿ ಆರ್.ಟಿ.ಜಿ.ಎಸ್ ಮೂಲಕ ಹಣ ವರ್ಗಾವಣೆ ಮಾಡುವುದಾಗಿ ಹೇಳುತ್ತಿದ್ದ. ನಂತರ, ಹಣ ಪಾವತಿ ಬಗ್ಗೆ ನಕಲಿ ಸಂದೇಶ ಕಳುಹಿಸುತ್ತಿದ್ದ. ನಂತರ, ಆಭರಣ ಸಮೇತ ಪರಾರಿಯಾಗುತ್ತಿದ್ದ’ ಎಂದೂ ತಿಳಿಸಿದರು.
‘ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲೂ ಆರೋಪಿ ಕೃತ್ಯ ಎಸಗಿರುವ ಮಾಹಿತಿ ಇದೆ. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದೂ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.