
ಬೆಂಗಳೂರು: ಜಗದ್ಗುರು ರೇಣುಕಾಚಾರ್ಯರು ಜಾತಿ ಭೇದವಿಲ್ಲದೇ ಎಲ್ಲರಿಗೂ ಲಿಂಗ ದೀಕ್ಷೆಯನ್ನು ನೀಡುವ ಮೂಲಕ ವೀರಶೈವ ತತ್ವವನ್ನು ಬೋಧಿಸಿದ್ದರು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭಾನುವಾರ ಆಯೋಜಿಸಿದ್ದ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಸತ್ಯ ಮತ್ತು ಶಾಂತಿಯ ತಳಹದಿಯ ಮೇಲೆ ಸುಸಂಸ್ಕೃತ ಸಮಾಜ ನಿರ್ಮಿಸಲು ಜಗದ್ಗುರು ರೇಣುಕಾಚಾರ್ಯರು ಶ್ರಮಿಸಿದ್ದಾರೆ. ತೆಲಂಗಾಣಕ್ಕೆ ಸೇರಿದ ಕೊಲ್ಲಿಪಾಕಿ ಎಂಬ ಗ್ರಾಮದಲ್ಲಿ ವಿವಿಧ ಸಮುದಾಯಕ್ಕೆ ಸೇರಿದ 18 ಮಠಗಳನ್ನು ಸ್ಥಾಪಿಸುವ ಮೂಲಕ ಸಾಮಾಜಿಕ ಕ್ರಾಂತಿಯನ್ನು ಮಾಡಿದ್ದರು. ಧಾರ್ಮಿಕ ಸಿದ್ಧಾಂತದ ಜೊತೆಗೆ ಸೈದ್ಧಾಂತಿಕ, ಸಾಮಾಜಿಕ ಮತ್ತು ಶೈಕ್ಷಣಿಕ, ಮಹಿಳೆಯರ ಕಲ್ಯಾಣಕ್ಕೂ ಒತ್ತು ನೀಡಿದ್ದರು’ ಎಂದು ತಿಳಿಸಿದರು.
ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ‘ವೀರಶೈವ ಲಿಂಗಾಯತ ಮಠಮಾನ್ಯಗಳು ಸರ್ವ ಧರ್ಮ, ಜಾತಿ, ಜನಾಂಗದವರಿಗೂ ಆಶ್ರಯ, ಅನ್ನ ಮತ್ತು ಶಿಕ್ಷಣ ನೀಡುವ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿವೆ’ ಎಂದರು.
‘ಬೆಂಗಳೂರು ನಗರಕ್ಕೆ ಶಿಕ್ಷಣ ಪಡೆಯಲು ಬರುವ ನಮ್ಮ ಸಮುದಾಯದ ವಿದ್ಯಾರ್ಥಿಗಳಿಗಾಗಿ ಬೃಹತ್ ವಸತಿನಿಲಯವನ್ನು ಪ್ರಾರಂಭಿಸಲಾಗುವುದು. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಮೂಲಕ ಸಮುದಾಯದ ಬಡವರನ್ನು ಗುರುತಿಸಿ, ಆರ್ಥಿಕವಾಗಿ ಸಬಲರನ್ನಾಗಿ ಮಾಡಲಾಗುವುದು. ಮುಂಬರುವ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಒದಗಿಸುವಂತೆ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು’ ಎಂದು ಹೇಳಿದರು.
ಗುಬ್ಬಿಯ ದೊಡ್ಡಗುಣಿ ರಂಭಾಪುರಿ ಶಾಖಾ ಮಠದ ರೇವಣ ಸಿದ್ಧೇಶ್ವರ ಸ್ವಾಮೀಜಿ, ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಘಟಕದ ಮಹಿಳಾ ಅಧ್ಯಕ್ಷೆ ವೀಣಾ ಕಾಶಪ್ಪನವರ್, ಪತ್ರಕರ್ತ ಪ್ರಶಾಂತ್ ರಿಪ್ಪನ್ಪೇಟೆ, ರೇಣುಕಾಚಾರ್ಯ ವಿದ್ಯಾ ಸಂಸ್ಥೆಯ ಉಪಾಧ್ಯಕ್ಷ ಎಸ್.ವಿ. ರಾಜೇಂದ್ರ ಪ್ರಸಾದ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.