ADVERTISEMENT

ಜಮನಾಲಾಲ್‌ ಬಜಾಜ್‌ ಟ್ರಸ್ಟ್ ಮೇಲ್ಮನವಿ ವಜಾ

​ಪ್ರಜಾವಾಣಿ ವಾರ್ತೆ
Published 31 ಜನವರಿ 2026, 20:15 IST
Last Updated 31 ಜನವರಿ 2026, 20:15 IST
ಕೋರ್ಟ್ (ಸಾಂದರ್ಭಿಕ ಚಿತ್ರ)
ಕೋರ್ಟ್ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ಮಾಗಡಿ ಮುಖ್ಯ ರಸ್ತೆಯಲ್ಲಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವತಿಯಿಂದ ‘ಮೆಗಾ ಕೃಷಿ ಮಾರುಕಟ್ಟೆ’ ನಿರ್ಮಾಣಕ್ಕಾಗಿ 172 ಎಕರೆಗೂ ಹೆಚ್ಚಿನ ವಿಶಾಲ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿದ್ದ ರಾಜ್ಯ ಸರ್ಕಾರದ ಕ್ರಮ ವನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಲಾದ ಮೇಲ್ಮನವಿಯನ್ನು ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ.

ಭೂ ಸ್ವಾಧೀನ ಕ್ರಮವನ್ನು ಪ್ರಶ್ನಿಸಿ, ‘ಜಮನಾಲಾಲ್‌ ಬಜಾಜ್‌ ಸೇವಾ ಟ್ರಸ್ಟ್‌’ ಅಧ್ಯಕ್ಷ ರಾಹುಲ್ ಬಜಾಜ್‌ ಸೇರಿ ದಂತೆ ಎಂಟು ಟ್ರಸ್ಟಿಗಳು ಸಲ್ಲಿಸಿದ್ದ ಪ್ರತ್ಯೇಕ ರಿಟ್‌ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ನಿಯೋಜನೆ ಗೊಂಡಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ವಿಶೇಷ ನ್ಯಾಯಪೀಠ ಈ ಮೊದಲು ತಿರಸ್ಕರಿಸಿತ್ತು.

ಇದನ್ನು ಪ್ರಶ್ನಿಸಿ ‘ಜಮನಾಲಾಲ್‌ ಬಜಾಜ್‌ ಸೇವಾ ಟ್ರಸ್ಟ್‌’ ರಿಟ್‌ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಇದೀಗ, ‘ಏಕಸದಸ್ಯ ನ್ಯಾಯಪೀಠದ ತೀರ್ಪಿನಲ್ಲಿ ಯಾವುದೇ ಲೋಪಗಳಿಲ್ಲ’ ಎಂದು ಸ್ಪಷ್ಟಪಡಿಸಿದೆ. ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಕಿರಣ್‌ ವಿ.ರೋಣ್‌ ವಾದ ಮಂಡಿಸಿದ್ದರು.

ADVERTISEMENT

ಪ್ರಕರಣ: ‘ಮಾಗಡಿ ಮುಖ್ಯ ರಸ್ತೆಯಲ್ಲಿನ ಶ್ರೀಗಂಧ ಕಾವಲ್‌ನಲ್ಲಿ 172 ಎಕರೆ 22 ಗುಂಟೆ, ಹೇರೋಹಳ್ಳಿಯ ಎರಡು ಪ್ರದೇಶಗಳಲ್ಲಿ ಕ್ರಮವಾಗಿ 104 ಎಕರೆ 5 ಗುಂಟೆ ಹಾಗೂ 3 ಎಕರೆ 34 ಗುಂಟೆ ಜಮೀನನ್ನು ಸ್ವಾಧೀನಕ್ಕೆ ಪಡೆಯಲು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ಮತ್ತು ಬೆಂಗಳೂರು ಜಿಲ್ಲಾಧಿಕಾರಿ 1999ರ ಏಪ್ರಿಲ್‌ 13ರಂದು ಅಧಿಸೂಚನೆ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಟ್ರಸ್ಟ್ ಹೈಕೋರ್ಟ್ ಮೆಟ್ಟಿಲೇರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.