ADVERTISEMENT

ಭವಿಷ್ಯದಲ್ಲಿ ನೀರಿಗೆ ಹಾಹಾಕಾರ: ದೇವೇಗೌಡ ಕಳವಳ

​ಪ್ರಜಾವಾಣಿ ವಾರ್ತೆ
Published 11 ಮೇ 2022, 15:56 IST
Last Updated 11 ಮೇ 2022, 15:56 IST
ಗವಿಪುರದಲ್ಲಿ ನಡೆದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಎಚ್‌.ಡಿ.ದೇವೇಗೌಡ ಮಾತನಾಡಿದರು. ಮುಖಂಡ ಟಿ.ಎ.ಶರವಣ, ಸಿ.ಎಂ. ಇಬ್ರಾಹಿಂ, ಎಚ್‌.ಡಿ.ಕುಮಾರಸ್ವಾಮಿ ಇದ್ದರು –ಪ್ರಜಾವಾಣಿ ಚಿತ್ರ
ಗವಿಪುರದಲ್ಲಿ ನಡೆದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಎಚ್‌.ಡಿ.ದೇವೇಗೌಡ ಮಾತನಾಡಿದರು. ಮುಖಂಡ ಟಿ.ಎ.ಶರವಣ, ಸಿ.ಎಂ. ಇಬ್ರಾಹಿಂ, ಎಚ್‌.ಡಿ.ಕುಮಾರಸ್ವಾಮಿ ಇದ್ದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಕೇಂದ್ರದ ನಿರ್ಲಕ್ಷ್ಯದಿಂದಾಗಿ ನಮ್ಮ ನೀರು ನಾವು ಪಡೆಯಲು ಆಗಲಿಲ್ಲ. ಈಗಲೇ ಸಮಸ್ಯೆ ಪರಿಹರಿಸಿಕೊಳ್ಳದಿದ್ದರೆ ಭವಿಷ್ಯದಲ್ಲಿ ನೀರಿನ ಹಾಹಾಕಾರ ಎದುರಿಸಬೇಕಾಗಲಿದೆ’ ಎಂದು ಜೆಡಿಎಸ್‍ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಕಳವಳ ವ್ಯಕ್ತಪಡಿಸಿದರು.

ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ನೀರಿಗೆ ಈಗಲೇ ಕಷ್ಟವಾಗಿದೆ, ಮುಂದಿನ ದಿನಗಳು ಇನ್ನೂ ಕಷ್ಟವಾಗಲಿವೆ’ ಎಂದರು.

‘ಈಗ ಅಭಿವೃದ್ಧಿ ಹೆಸರಿನಲ್ಲಿ ಜನರ ಹಣ ಲೂಟಿ ಮಾಡಲಾಗುತ್ತಿದೆ. ಮೊನ್ನೆ ಬಿದ್ದ ಸಣ್ಣ ಮಳೆಗೆ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕ್ರೀಡಾಂಗಣದ ಚಾವಣಿಯೇ ಬಿದ್ದು ಹೋಗಿದೆ. ಇದು ಇವರ ಅಭಿವೃದ್ಧಿಯ ಶೈಲಿ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ವಿಧಾನ ಪರಿಷತ್‌ ಸದಸ್ಯ ಭೋಜೇಗೌಡ, ಮುಖಂಡರಾದಟಿ.ಎ. ಶರವಣ, ಬಾಗೇಗೌಡ, ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಆರ್.‌ಪ್ರಕಾಶ್‌, ಪ್ರಮುಖರ ಸಮಿತಿಯ ಸದಸ್ಯೆ ರೂತ್‌ ಮನೋರಮಾ ಇದ್ದರು.

‘ಮಕ್ಕಳ ಚಿಂತೆ ಬಿಡಿ: ಜೆಡಿಎಸ್ ಬೆಂಬಲಿಸಿ’

ಪೀಣ್ಯ ದಾಸರಹಳ್ಳಿ: ‘ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ಅಧಿಕಾರದ ಹಪಾಹಪಿ ಇಲ್ಲ. ಜನ ಸೇವೆಯೇ ನಮಗೆ ಮುಖ್ಯ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಹೆಗ್ಗನಹಳ್ಳಿಯ ಜಿಕೆಡಬ್ಲ್ಯೂ ಬಡಾವಣೆಯಲ್ಲಿ ಆಯೋಜಿಸಿದ್ದ ಜನತಾ ಜಲಧಾರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಜನ ಸಾಲಗಾರರಾಗಬೇಡಿ, ಶುಲ್ಕ ಭರಿಸಲು ಕಣ್ಣೀರು ಹಾಕಬೇಡಿ, ಬದಲಿಗೆ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಸಿ. ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಉತ್ತಮ ಶಿಕ್ಷಣ ಒದಗಿಸುವ ಶಾಲೆ ನಿರ್ಮಿಸಲಾಗುವುದು’ ಎಂದರು.

ಶಾಸಕ ಆರ್. ಮಂಜುನಾಥ್ ಮಾತನಾಡಿ, ‘ಕಡಿಮೆ ಅವಧಿಗೆ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಜನಪರ ಯೋಜನೆಗಳನ್ನು ಜಾರಿಗೆ ತಂದರು. ಕೆರೆ, ನದಿ, ಅಣೆಕಟ್ಟುಗಳನ್ನು ಅಭಿವೃದ್ಧಿಪಡಿಸಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜನತಾ ಜಲಧಾರೆ ಕಾರ್ಯಕ್ರಮ ನಡೆಸಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.