
ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಕಳೆದ 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬನ್ನೇರುಘಟ್ಟ ರಸ್ತೆಯ ಹೊಸ ಸಂಪಂಗಿ ರಾಮನಗರದ 9ನೇ ಕ್ರಾಸ್ ನಿವಾಸಿ ಮಹಾಲಿಂಗಂ ಬಂಧಿತ ಆರೋಪಿ.
2002ರ ಸೆ.18ರಂದು ಮಧ್ಯಾಹ್ನ 12.45ರ ಸುಮಾರಿಗೆ ಜಯನಗರದ ನಾಲ್ಕನೇ ಬ್ಲಾಕ್ನ ಮನೆಗೆ ನುಗ್ಗಿ ಚಾಕು ತೋರಿಸಿ ಮೂವರು ಆರೋಪಿಗಳು, ನಗದು, ಚಿನ್ನಾಭರಣ, ಕ್ಯಾಮೆರಾ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದರು. ಘಟನೆ ಸಂಬಂಧ ಮಹೇಶ್ ಅಲಿಯಾಸ್ ‘ಡೇರಿ’ ಮಹೇಶ್, ಮಹಾಲಿಂಗಂ ಹಾಗೂ ಪರಶುರಾಮ್ ಅವರನ್ನು ಬಂಧಿಸಿದ್ದರು. ಅದಾದ ಮೇಲೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿಗಳ ಪೈಕಿ, ಮಹಾಲಿಂಗಂ ಎಂಬಾತ ನ್ಯಾಯಾಲಯದಿಂದ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ. ಅದಾದ ಮೇಲೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ಹೇಳಿದರು.
‘ಖಚಿತ ಮಾಹಿತಿ ಆಧರಿಸಿ ಆರೋಪಿಯಿದ್ದ ಸ್ಥಳವನ್ನು ಪತ್ತೆಮಾಡಿ ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.