ಬೆಂಗಳೂರು: ರಾಜ್ಯದಾದ್ಯಂತ ಮತಗಟ್ಟೆ ಹಂತದಲ್ಲಿ ಪ್ರಚಾರವನ್ನು ಮತ್ತಷ್ಟು ಚುರುಕು ಗೊಳಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಗಳಿಗೆ ಸೂಚಿಸಿದ್ದಾರೆ.
ಚುನಾವಣೆ ನಿರ್ವಹಣೆಗಾಗಿ ರಚಿಸಿರುವ 32 ಸಮಿತಿಗಳ ಸದಸ್ಯರ ಜತೆ ಶನಿವಾರ ಸಭೆ ನಡೆಸಿದ ಅವರು, ‘ಎಲ್ಲ ಸಮಿತಿಗಳೂ ಕ್ರಿಯಾಶೀಲವಾಗಿ ಯೋಚಿಸಿ ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷ ನೀಡುತ್ತಿರುವ ಭರವಸೆಗಳ ಕುರಿತು ತಲೆ ಕೆಡಿಸಿಕೊಳ್ಳಬಾರದು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳ ಸಾಧನೆಗಳ ಆಧಾರದಲ್ಲಿ ಮತದಾರರ ಮನವೊಲಿಕೆ ಮಾಡಬೇಕು’ ಎಂಬ ಸೂಚನೆ ನೀಡಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿಯೂ ಆಗಿರುವ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ‘ಎಲ್ಲ ಸಮಿತಿಗಳ ಕಾರ್ಯನಿರ್ವಹಣೆಯನ್ನು ನಡ್ಡಾ ಅವರು ಪರಿಶೀಲಿಸಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಹೊಸ ಯೋಚನೆಗಳನ್ನು ಕಾರ್ಯರೂಪಕ್ಕೆ ತರುವಂತೆ ಸಲಹೆ ನೀಡಿದ್ದಾರೆ. ಮನೆ, ಮನೆ ಭೇಟಿಯನ್ನೂ ಹೆಚ್ಚಿಸುವಂತೆ ತಿಳಿಸಿದ್ದಾರೆ’ ಎಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ರಾಜೀವ್ ಚಂದ್ರಶೇಖರ್ ಸಭೆಯಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.