ಯಲಹಂಕ: ‘ಭ್ರಷ್ಟಾಚಾರ ಎನ್ನುವುದು ಎಲ್ಲೆಡೆ ವ್ಯಾಪಕವಾಗಿ ಹರಡಿರುವ ಪರಿಣಾಮ ಅಭಿವೃದ್ಧಿ ಕುಂಠಿತವಾಗಿದೆ’ ಎಂದು ನಿವೃತ್ತ ಲೋಕಾಯುಕ್ತ ಎನ್. ಸಂತೋಷ್ ಹೆಗ್ಡೆ ಕಳವಳ ವ್ಯಕ್ತಪಡಿಸಿದರು.
ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್, ರಾಜ್ಯ ಖಾಸಗಿ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಆಯೋಜಿಸಿದ್ದ ವೈಜ್ಞಾನಿಕ ಸಮ್ಮೇಳನ ಹಾಗೂ ನಾಡಪ್ರಭು ಕೆಂಪೇಗೌಡರ 514ನೇ ಜಯಂತಿಯಲ್ಲಿ ಅವರು ಮಾತನಾಡಿದರು.
‘ದುರಾಸೆ ಬದುಕಿನಿಂದ ಹೊರಬಂದಾಗ ಮಾತ್ರ ಭ್ರಷ್ಟಾಚಾರ ನಿರ್ಮೂಲನೆಯಾಗಲು ಸಾಧ್ಯ. ಇದರ ವಿರುದ್ಧ ಹೋರಾಟ ನಿರಂತರವಾಗಿ ಇರಬೇಕಾಗಿದೆ. ಈ ಎಲ್ಲದರ ನಡುವೆ ಪ್ರಾಮಾಣಿಕರು ಹಾಗೂ ಸಾಧಕರು ಇದ್ದಾರೆ. ಅಂತವರನ್ನು ಗುರುತಿಸಿ ಗೌರವಿಸುವ ಪರಂಪರೆಯನ್ನು ವೈಜ್ಞಾನಿಕ ಸಂಶೋಧನಾ ಪರಿಷತ್ತು ನಡೆಸುತ್ತಾ ಬರುತ್ತಿರುವುದು ಅತ್ಯಂತ ಅಭಿನಂದನಾರ್ಹ’ ಎಂದರು.
ಸಮ್ಮೇಳನದ ಸರ್ವಾಧ್ಯಕ್ಷ ಎಸ್.ಕೆ.ಉಮೇಶ್ ಮಾತನಾಡಿ, ‘ಸಮಾಜದಲ್ಲಿ ಅಪರಾಧ ಕೃತ್ಯಗಳು ಹೆಚ್ಚುತ್ತಿವೆ. ಕಂದಾಚಾರ, ಮೌಢ್ಯಾಚರಣೆ ಸಾಮಾನ್ಯವಾಗುತ್ತಿದ್ದು, ಮನುಷ್ಯ ಸಂಬಂಧಗಳು ನಾಶವಾಗುತ್ತಿವೆ’ ಎಂದು ಹೇಳಿದರು.
ನಿವೃತ್ತ ಪ್ರಾಂಶುಪಾಲ ಎನ್.ಮುನಿಕೆಂಪಣ್ಣ ಉಪನ್ಯಾಸ ನೀಡಿದರು.
ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಘಟಕದ ಅಧ್ಯಕ್ಷ ಡಾ.ಹುಲಿಕಲ್ ನಟರಾಜ್ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 42 ಮಂದಿಗೆ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.