ಬೆಂಗಳೂರು: ‘ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರವು ಎಲ್ಲ ವರ್ಗದವರಿಗೂ ನ್ಯಾಯ ಕಲ್ಪಿಸುವ ಕೆಲಸ ಮಾಡಲಿ. ಆಯಾ ಸಮಾಜದ ಸ್ವಾಮೀಜಿಗಳು, ಮುಖಂಡರು, ತಜ್ಞರು ಹಾಗೂ ಸಾಮಾನ್ಯ ಜನರ ಅಭಿಪ್ರಾಯಗಳನ್ನು ಆಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಿ. ಹಾಗಾದಾಗ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ’ ಎಂದು ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ನ ಸಂಸ್ಥಾಪಕ ವಿನಯ್ ಗುರೂಜಿ ಹೇಳಿದರು.
ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿಯು ಭಾನುವಾರ ಹಮ್ಮಿಕೊಂಡಿದ್ದ ‘ಸಮಾಜದ ಬಡ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಮತ್ತು ಗ್ರಾಮ ಪಂಚಾಯಿತಿ ನೂತನ ಸದಸ್ಯರಿಗೆ ಅಭಿನಂದನೆ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
‘ಯಾರಿಗೆ ಅಗತ್ಯವಿದೆಯೊ ಅಂತಹವರಿಗೆ ಸರ್ಕಾರದ ಸವಲತ್ತುಗಳು ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದರು.
ಆರ್ಯವೈಶ್ಯ ಮಹಾಮಂಡಳಿಯ ಅಧ್ಯಕ್ಷ ಟಿ.ಎ.ಶರವಣ, ‘ನಮ್ಮ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು ಎಂಬ ಉದ್ದೇಶದಿಂದ ಸರ್ಕಾರದ ಮೇಲೆ ಒತ್ತಡ ಹೇರಿ ಆರ್ಯವೈಶ್ಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಶ್ರಮಿಸಿದ್ದೇನೆ. ನಾನು ಅಧ್ಯಕ್ಷನಾಗಿದ್ದಾಗ ನಿಗಮಕ್ಕೆ ₹11 ಕೋಟಿ ಅನುದಾನ ನೀಡಲಾಗಿತ್ತು. ಆದರೆ ಈಗ ಕೇವಲ ₹5 ಕೋಟಿ ನಿಗದಿ ಮಾಡಲಾಗಿದೆ. ಇದರಲ್ಲಿ ₹1 ಕೋಟಿಯನ್ನು ಆಡಳಿತಾತ್ಮಕ ವೆಚ್ಚಕ್ಕೆ ತೆಗೆದಿಟ್ಟರೆ, ಉಳಿದ ಹಣದಲ್ಲಿ ಯಾವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಗುವುದಿಲ್ಲ’ ಎಂದರು.
‘ಬಜೆಟ್ನಲ್ಲಿ ಸಮುದಾಯದ ಅಭಿವೃದ್ಧಿಗಾಗಿ ₹100 ಕೋಟಿ ಮೀಸಲಿಡಬೇಕು. ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗಕ್ಕೆ ನಮ್ಮ ಸಮುದಾಯವನ್ನೂ ಸೇರ್ಪಡೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಎಚ್ಚರಿಸಿದರು.
ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ, ‘ಟ್ಯಾಬ್ ಪಡೆದವರೆಲ್ಲಾ ಅದನ್ನು ಒಳ್ಳೆಯ ಉದ್ದೇಶಕ್ಕೆ ಬಳಸಬೇಕು. ಸಾಮಾಜಿಕ ಜಾಲತಾಣಗಳಿಂದ ದೂರ ಇರಬೇಕು. ಸಾಧಕರ ಜೀವನ ಚರಿತ್ರೆಗಳನ್ನು ಓದುವ ಮೂಲಕ ಸದ್ಗುಣಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.