‘ಜನೋಪಕಾರಿ ದೊಡ್ಡಣ್ಣಶೆಟ್ಟರ ಕಲಾಸಿಪಾಳ್ಯ ಬಸ್ ನಿಲ್ದಾಣ’ ಮರುನಾಮಕರಣ ನಾಮಫಲಕವನ್ನು ರಾಮಲಿಂಗಾರೆಡ್ಡಿ ಅನಾವರಣ ಮಾಡಿದರು
ಬೆಂಗಳೂರು: ಶತಮಾನದ ಹಿಂದೆಯೇ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಸ್ಥಾಪಿಸಿ ಅದರಡಿಯಲ್ಲಿ ಶಾಲಾ– ಕಾಲೇಜುಗಳನ್ನು ನಿರ್ಮಿಸಿ ಸರ್ವಜನಾಂಗಕ್ಕೆ ಶಿಕ್ಷಣ ನೀಡಿದ್ದ ದೊಡ್ಡಣ್ಣ ಶೆಟ್ಟರ ಹೆಸರನ್ನು ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ಇಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
‘ಜನೋಪಕಾರಿ ದೊಡ್ಡಣ್ಣಶೆಟ್ಟರ ಕಲಾಸಿಪಾಳ್ಯ ಬಸ್ ನಿಲ್ದಾಣ’ ಮರುನಾಮಕರಣದ ಫಲಕವನ್ನು ಶನಿವಾರ ಅನಾವರಣಗೊಳಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ವರ್ಷದಲ್ಲಿ ಎರಡು ಬಾರಿ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತಿದೆ. ದೊಡ್ಡಣ್ಣ ಶೆಟ್ಟರ ಹೆಸರಿನಲ್ಲೂ ಫಲಪುಷ್ಪ ಪ್ರದರ್ಶನ ಏರ್ಪಡಿಸಲು ತೋಟಗಾರಿಕೆ ಇಲಾಖೆ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ದೊಡ್ಡಣ್ಣ ಶೆಟ್ಟರ ಸಮಾಜಸೇವೆಯನ್ನು ಗುರುತಿಸಿ ಅಂದಿನ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ‘ಜನೋಪಕಾರಿ’ ಎಂಬ ಬಿರುದು ನೀಡಿದ್ದರು ಎಂದು ನೆನಪು ಮಾಡಿಕೊಂಡರು.
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಚೆಕ್ ವಿತರಿಸಲಾಯಿತು. ಕಾಂಗ್ರೆಸ್ ಮುಖಂಡ ವಿ.ಆರ್. ಸುದರ್ಶನ್, ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.