
ನಮ್ಮ ಮೆಟ್ರೊ ಗುಲಾಬಿ ಮಾರ್ಗದ ಕಾಮಗಾರಿಗಾಗಿ ಮುಚ್ಚಲಾಗಿದ್ದ ಕಾಮರಾಜ್ ರಸ್ತೆ ಶುಕ್ರವಾರ ಪೂರ್ಣ ಪ್ರಮಾಣದಲ್ಲಿ ಸಂಚಾರಕ್ಕೆ ಮುಕ್ತವಾಗಿದ್ದು, ವಾಹನಗಳು ಸಂಚರಿಸಿದವು
ಪ್ರಜಾವಾಣಿ ಚಿತ್ರ: ಪ್ರಶಾಂತ್ ಜಿ.ಎಚ್.
ಬೆಂಗಳೂರು: ನಮ್ಮ ಮೆಟ್ರೊ ಗುಲಾಬಿ ಮಾರ್ಗದ ಕಾಮಗಾರಿಗಾಗಿ ಮುಚ್ಚಿದ್ದ ಕಾಮರಾಜ್ ರಸ್ತೆ ಆರೂವರೆ ವರ್ಷಗಳ ಬಳಿಕ ಶುಕ್ರವಾರ ಪೂರ್ಣ ಪ್ರಮಾಣದಲ್ಲಿ ಸಂಚಾರಕ್ಕೆ ತೆರೆದುಕೊಂಡಿದೆ.
ಎಂ.ಜಿ. ರಸ್ತೆಯಿಂದ ಕಬ್ಬನ್ ರಸ್ತೆ ಜಂಕ್ಷನ್ ಕಡೆಗೆ ಸಾಗುವ ಒಂದು ಬದಿ ರಸ್ತೆಯಲ್ಲಿ 2024ರ ಜೂನ್ನಲ್ಲಿ ವಾಹನ ಸಂಚಾರ ಆರಂಭವಾಗಿತ್ತು. ಕಬ್ಬನ್ ರಸ್ತೆ ಜಂಕ್ಷನ್ನಿಂದ ಎಂ.ಜಿ. ರಸ್ತೆ ಕಡೆಗೆ ಬರುವ ಪಥದಲ್ಲಿ ಒಂದೂವರೆ ವರ್ಷದ ಬಳಿಕ ವಾಹನ ಸಂಚಾರ ಆರಂಭಗೊಂಡಿತು.
ನಾಗವಾರ–ಕಾಳೇನ ಅಗ್ರಹಾರ ಮೆಟ್ರೊ ಮಾರ್ಗದಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್ನಿಂದ ಕಬ್ಬನ್ ರಸ್ತೆ ಜಂಕ್ಷನ್ವರೆಗೆ ಅಂತರ್ಬದಲಾವಣೆಯ (ಇಂಟರ್ಚೇಂಜ್) ಎಂ.ಜಿ. ರಸ್ತೆ ಮೆಟ್ರೊ ಭೂಗತ ನಿಲ್ದಾಣ ನಿರ್ಮಿಸಲು ಕಾಮರಾಜ್ ರಸ್ತೆಯನ್ನು 2019ರ ಜೂನ್ನಲ್ಲಿ ಬಿಎಂಆರ್ಸಿಎಲ್ ಮುಚ್ಚಿತ್ತು.
ಕಾಮರಾಜ್ ರಸ್ತೆ ಮುಚ್ಚಿದ್ದರಿಂದ, ಈ ರಸ್ತೆ ಮೂಲಕ ಬ್ರಿಗೇಡ್ ರಸ್ತೆ, ಕಮರ್ಷಿಯಲ್ ಸ್ಟ್ರೀಟ್ ಮತ್ತು ಇತರ ಸ್ಥಳಗಳನ್ನು ತಲುಪಲು ವಾಹನ ಸವಾರರು ಸುತ್ತು ಹಾಕಿಕೊಂಡು ಬರುವಂತಾಗಿತ್ತು.
ಪುನರ್ ನಿರ್ಮಿತ ರಸ್ತೆಯು 214 ಮೀಟರ್ ಉದ್ದವಿದ್ದು, ಎರಡು ಮಾರ್ಗಗಳು 11 ಮೀಟರ್ ಅಗಲ ಹೊಂದಿವೆ. ರಸ್ತೆ ಮುಕ್ತ ಆಗಿರುವುದರಿಂದ ವಾಹನ ಸಂಚಾರ ಸುಗಮವಾಗಲಿದೆ. ಕಮರ್ಷಿಯಲ್ ಸ್ಟ್ರೀಟ್ ಮತ್ತು ಬ್ರಿಗೇಡ್ ರಸ್ತೆ ನಡುವಿನ ಸಂಪರ್ಕ ಇನ್ನಷ್ಟು ಸುಧಾರಣೆಯಾಗಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.