ADVERTISEMENT

ರಾಜ್ಯದ ಕಾನೂನು ವಿರೋಧಿಸುವವರು ಇಲ್ಲಿರಲು ಅರ್ಹರಲ್ಲ: ಟಿ.ಎಸ್. ನಾಗಾಭರಣ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 19:18 IST
Last Updated 14 ಜುಲೈ 2021, 19:18 IST
ಕನ್ನಡ ಭಾಷಾ ಕಲಿಕಾ ಅಧಿನಿಯಮದ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆಸುತ್ತಿರುವ ಪೋಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸುರೇಶ್ ಕುಮಾರ್ ಅವರಿಗೆ ಟಿ.ಎಸ್. ನಾಗಾಭರಣ ಅವರು ಮನವಿ ಪತ್ರ ಸಲ್ಲಿಸಿದರು. ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ ಇದ್ದರು.
ಕನ್ನಡ ಭಾಷಾ ಕಲಿಕಾ ಅಧಿನಿಯಮದ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆಸುತ್ತಿರುವ ಪೋಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸುರೇಶ್ ಕುಮಾರ್ ಅವರಿಗೆ ಟಿ.ಎಸ್. ನಾಗಾಭರಣ ಅವರು ಮನವಿ ಪತ್ರ ಸಲ್ಲಿಸಿದರು. ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ ಇದ್ದರು.   

ಬೆಂಗಳೂರು: ‘ಶಾಲೆಗಳಲ್ಲಿ ಕನ್ನಡ ಭಾಷೆ ಕಲಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಾರಿಗೆ ತರುವ ಅಧಿನಿಯಮವನ್ನು ವಿರೋಧಿಸುವವರು ರಾಜ್ಯದಲ್ಲಿ ಇರಲು ಅರ್ಹರಲ್ಲ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿರುವ ಪ್ರೆಸಿಡೆನ್ಸಿ ಶಾಲೆಯ ವಿದ್ಯಾರ್ಥಿಗಳ ಪೋಷಕರು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕನ್ನಡ ಭಾಷಾ ಕಲಿಕಾ ಕಾಯ್ದೆ ವಿರುದ್ಧ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ. ಇದನ್ನು ಖಂಡಿಸಿರುವ ನಾಗಾಭರಣ, ಈ ಬಗ್ಗೆ ಸೂಕ್ತ ಕ್ರಮವಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿ ಪತ್ರವನ್ನು ಬುಧವಾರ ಸಲ್ಲಿಸಿದರು.

‘ಈ ಕಾಯ್ದೆಯಲ್ಲಿ ಮಕ್ಕಳ ಮೇಲೆ ಭಾಷಾ ಕಲಿಕೆಯನ್ನು ಹೇರುತ್ತಿಲ್ಲ. ಬದಲಿಗೆ ಸಂವಿಧಾನಬದ್ಧವಾಗಿ ಹಂತ ಹಂತವಾಗಿ ಮಕ್ಕಳನ್ನು ಭಾಷೆಯ ಕಲಿಕೆಯಲ್ಲಿ ತೊಡಗಿಸಲಾಗುತ್ತಿದೆ. ಕನ್ನಡ ಭಾಷಾ ಕಲಿಕಾ ಕಾಯ್ದೆ-2017ರ ಅನ್ವಯ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಅದೇ ರೀತಿ, ಕೇಂದ್ರ ಪಠ್ಯ ಕ್ರಮದ ಎಲ್ಲ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಇಲ್ಲಿ ನೆಲೆಸಿರುವ ಹೊರ ರಾಜ್ಯದ ಕೆಲ ಪೋಷಕರು ಆಕ್ಷೇಪ ವ್ಯಕ್ತಪಡಿಸಿ, ಆನ್‌ಲೈನ್ ಸಹಿ ಸಂಗ್ರಹ ಅಭಿಯಾನ ಆರಂಭಿಸಿರುವುದು ದುರಾದೃಷ್ಟಕರ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT

‘ಕನ್ನ ಭಾಷೆ ಕಲಿಕೆಯ ಮಹತ್ವವನ್ನು ರಾಜ್ಯದಲ್ಲಿ ನೆಲೆಸಿರುವ ಜನರು ಅರ್ಥೈಸಿಕೊಳ್ಳಬೇಕು. ಇದನ್ನು ತಪ್ಪಾಗಿ ಗ್ರಹಿಸಿ, ಭಾಷಾ ಸೌಹಾರ್ದಕ್ಕೆ ತೊಡಕುಂಟಾಗದಂತೆ ಪೋಷಕರು ನಡೆದುಕೊಳ್ಳಬೇಕು. ಸರ್ಕಾರವು ಕನ್ನಡ ಕಲಿಕಾ ಅಧಿನಿಯಮವನ್ನು ರಾಜ್ಯದ ಎಲ್ಲ ಶಾಲೆಗಳಲ್ಲೂ ಕಡ್ಡಾಯವಾಗಿ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.