ADVERTISEMENT

‘ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡ ಕಡ್ಡಾಯಗೊಳಿಸಿ’

ವೈದ್ಯಕೀಯ ಸಂಸ್ಥೆಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪತ್ರ

​ಪ್ರಜಾವಾಣಿ ವಾರ್ತೆ
Published 4 ಜುಲೈ 2021, 5:36 IST
Last Updated 4 ಜುಲೈ 2021, 5:36 IST
ಟಿ.ಎಸ್. ನಾಗಾಭರಣ ಅವರು ಟಿ.ಕೆ. ಅನಿಲ್‌ ಕುಮಾರ್‌ ಅವರಿಗೆ ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.
ಟಿ.ಎಸ್. ನಾಗಾಭರಣ ಅವರು ಟಿ.ಕೆ. ಅನಿಲ್‌ ಕುಮಾರ್‌ ಅವರಿಗೆ ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.   

ಬೆಂಗಳೂರು: ‘ವೈದ್ಯಕೀಯ ಸೇವೆ ಪಡೆಯಲು ಬರುವ ಸಾಮಾನ್ಯ ಕನ್ನಡಿಗರ ನಾಳೆಗಳಿಗಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡದ ಬಳಕೆ ಕಡ್ಡಾಯವಾಗಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹಿಸಿದೆ.

ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ವೈದ್ಯಕೀಯ ಸಂಸ್ಥೆಗಳಿಗೆ ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಿ, ಮನವಿ ಮಾಡಿಕೊಂಡಿದೆ. ರಾಷ್ಟ್ರೀಯ ವೈದ್ಯರ ದಿನದಂದು ಚಾಲನೆ ಸಿಕ್ಕ ಈ ಅಭಿಯಾನ, ಶನಿವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಅಭಿಯಾನದ ಅಂಗವಾಗಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್‌ ಅವರನ್ನು ಭೇಟಿ ಮಾಡಿದ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ, ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ‘ವೈದ್ಯಕೀಯ ವಿಶ್ವವಿದ್ಯಾಲಯಗಳು, ವೈದ್ಯಕೀಯ ವೃತ್ತಿ ಶಿಕ್ಷಣ ಸಂಸ್ಥೆಗಳಲ್ಲಿ ಪಠ್ಯೇತರ ವಿಷಯವಾಗಿ ಕನ್ನಡವನ್ನು ಬೋಧಿಸಬೇಕು’ ಎಂದು ಮನವಿ ಮಾಡಿಕೊಂಡರು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಕನ್ನಡ ಬೋಧನೆ, ವೈದ್ಯ ಪದಕೋಶಗಳ ಬಳಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಅವರು ಚರ್ಚಿಸಿದರು.

ADVERTISEMENT

ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಟಿ.ಕೆ. ಅನಿಲ್‌ ಕುಮಾರ್‌, ‘ಈ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ, ಸುತ್ತೋಲೆಗಳನ್ನು ಹೊರಡಿಸಲಾಗುವುದು’ ಎಂದು ತಿಳಿಸಿದರು.

‘ಕೋವಿಡ್ ಸಂಕಷ್ಟದ ನಡುವೆಯೂ ಕನ್ನಡಕ್ಕೆ ಸಂಬಂಧಿಸಿದಂತೆ ಏಳು ಅಭಿಯಾನಗಳನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಇನ್ನಷ್ಟು ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದೇವೆ. ಪ್ರತಿ ತಿಂಗಳೂ ನೂತನ ಆಲೋಚನೆಗಳೊಂದಿಗೆ ಜನಸಾಮಾನ್ಯರನ್ನು ತಲುಪಲಾಗುವುದು’ ಎಂದು ಪ‍್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.