
ರಹಮತ್ ತರೀಕೆರೆ
ಬೆಂಗಳೂರು: ‘ಕನ್ನಡ ಎಂಬುದು ಕೇವಲ ಒಂದು ಭಾಷೆಯಲ್ಲ ಅದು ನಮ್ಮ ನಡೆ ನುಡಿಗಳನ್ನು ಸೊಗಸಾಗಿಸುವ ಆತ್ಮಶಕ್ತಿ’ ಎಂದು ಸಾಹಿತಿ ರಹಮತ್ ತರೀಕೆರೆ ಹೇಳಿದರು.
ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಕುವೆಂಪು, ಪಂಪ, ರನ್ನ ಹಾಗೂ ಕಾರಂತರ ಕಾವ್ಯದಿಂದ, ಬಸವಣ್ಣ ಮತ್ತು ಅಕ್ಕಮಹಾದೇವಿ ವಚನಗಳಿಂದ, ಬೇಂದ್ರೆ, ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಚಿಂತನೆಗಳಿಂದ ಕನ್ನಡವು ಇನ್ನೂ ನಮ್ಮೊಳಗೆ ಜೀವಂತವಾಗಿದೆ. ಕರ್ನಾಟಕ ರಾಜ್ಯೋತ್ಸವ ಕೇವಲ ಆಚರಣೆ ಅಲ್ಲ, ಇದು ವೈವಿಧ್ಯದಲ್ಲಿ ಏಕತೆ ಎಂಬ ನಂಬಿಕೆಗೆ ಸಾಕ್ಷಿ. ಹಲವಾರು ಜಾತಿ, ಧರ್ಮ, ಅಭಿರುಚಿ ಹಾಗೂ ಆಚರಣೆಗಳು ಇದ್ದರೂ ಈ ನಾಡಿನ ಮೇಲೆ ಇರುವ ಪ್ರೀತಿ ನಮ್ಮೆಲ್ಲರನ್ನು ಒಗ್ಗೂಡಿಸುತ್ತದೆ’ ಎಂದು ತಿಳಿಸಿದರು.
ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ ಮಾತನಾಡಿ, ‘ಕನ್ನಡ ಎಂದರೆ ಆತ್ಮಾಭಿಮಾನದ ಸಂಕೇತವಾಗಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ನಿರಂತರವಾಗಿ ಕನ್ನಡ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ಪ್ರಾಥಮಿಕ ಶಿಕ್ಷಣವನ್ನು ಕನ್ನಡದಲ್ಲಿಯೇ ಕಡ್ಡಾಯವಾಗಿ ನೀಡಬೇಕು. ಕನ್ನಡ ಅಭಿವೃದ್ಧಿ ಕೇವಲ ವಿಶ್ವವಿದ್ಯಾಲಯಗಳಿಗೆ ಸೀಮಿತವಾಗದೇ ರಾಜ್ಯದ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು. ಕನ್ನಡ ಭಾಷೆಯ ಬಗ್ಗೆ ಇರುವ ಕೀಳರಿಮೆಯನ್ನು ಬಿಟ್ಟು ಮಕ್ಕಳನ್ನು ಕನ್ನಡದಲ್ಲಿಯೇ ಮಾತನಾಡುವಂತೆ ಪ್ರೇರೇಪಿಸಬೇಕು’ ಎಂದರು.
ಇದೇ ಸಂದರ್ಭದಲ್ಲಿ ಕನ್ನಡ ಪೋಟಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿ ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.