ಬೆಂಗಳೂರು: ‘ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆಎಸ್ಡಿಎಲ್) ತನ್ನ ಉತ್ಪನ್ನಗಳ ಮೇಲೆ ಕನ್ನಡವನ್ನು ಕಡೆಗಣಿಸುತ್ತಿದ್ದು, ಈ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರನ್ನು ಆಗ್ರಹಿಸಿದ್ದಾರೆ.
ಈ ಬಗ್ಗೆ ಅವರು ಸಚಿವರಿಗೆ ಪತ್ರ ಬರೆದಿದ್ದಾರೆ. ‘ರಾಜ್ಯದಲ್ಲಿ ತಯಾರಾಗುವ ಎಲ್ಲ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಹಾಗೂ ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಕನ್ನಡದಲ್ಲಿಯೂ ಮುದ್ರಿಸಬೇಕು. ಈ ಬಗ್ಗೆ ಕೈಗಾರಿಕೆ ಇಲಾಖೆ ಆದೇಶ ಹೊರಡಿಸಿದೆ. ಆದರೆ, ಇಲಾಖೆಯ ಅಧೀನದಲ್ಲಿರುವ ಕೆಎಸ್ಡಿಎಲ್ ಈ ಆದೇಶಕ್ಕೆ ಯಾವುದೇ ಕಿಮ್ಮತ್ತು ನೀಡದಿರುವುದು ವಿಷಾದನೀಯ. ಕೂಡಲೇ ಸಂಸ್ಥೆಯ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು’ ಎಂದು ಒತ್ತಾಯಿಸಿದ್ದಾರೆ.
‘ಸಂಸ್ಥೆ ಉತ್ಪಾದಿಸುವ ಮೈಸೂರು ಸ್ಯಾಂಡಲ್ ಸೋಪು ಕನ್ನಡಿಗರ ಹೆಮ್ಮೆಯ ಪ್ರತೀಕವಾಗಿದೆ. ಇದು ದೇಶ-ವಿದೇಶಗಳನ್ನು ತಲುಪುವ ಮಾದರಿಯಲ್ಲಿ ಕನ್ನಡಿಗರ ಮನೆ–ಮನಗಳನ್ನು ತಲುಪಿದೆ. ಆದರೆ, ಈ ಸಂಸ್ಥೆಯು ತನ್ನ ಯಾವುದೇ ಉತ್ಪನ್ನಗಳ ಮೇಲೆ ಕನ್ನಡಕ್ಕೆ ಆದ್ಯತೆ ನೀಡದಿರುವುದು ಆಕ್ಷೇಪಾರ್ಹ. ಕೈಗಾರಿಕಾ ಇಲಾಖೆಯೇ ಹೊರಡಿಸಿರುವ ಈ ಆದೇಶವನ್ನು ಉಲ್ಲಂಘಿಸುವ ಮೂಲಕ ನೆಲದ ಕಾನೂನನ್ನು ಅಗೌರವಿಸಿದೆ’ ಎಂದಿದ್ದಾರೆ.
‘ಸಂಸ್ಥೆಯ ಈ ಕನ್ನಡ ವಿರೋಧಿ ಧೋರಣೆಯನ್ನು ಖಂಡಿಸಿ ಹಲವು ಕನ್ನಡ ಪರ ಸಂಘಟನೆಗಳು ಪ್ರಾಧಿಕಾರಕ್ಕೆ ಮನವಿಗಳನ್ನು ಸಲ್ಲಿಸಿವೆ. ಸಂಸ್ಥೆಯ ಎಲ್ಲ ಉತ್ಪನ್ನಗಳ ಮೇಲೆ ಕನ್ನಡದಕ್ಕೆ ಮೊದಲ ಪ್ರಾಶಸ್ತ್ಯವನ್ನು ನೀಡಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.