ಪುರುಷೋತ್ತಮ ಬಿಳಿಮಲೆ
ಬೆಂಗಳೂರು: ‘ಹೊರರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದ್ದು, ಇದು ಕನ್ನಡದ ಹಿತದೃಷ್ಟಿಯಿಂದ ಉತ್ತಮ ಬೆಳವಣಿಗೆಯಲ್ಲ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಬೇಸರ ವ್ಯಕ್ತಪಡಿಸಿದ್ದಾರೆ.
ನೆರೆ ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಒಟ್ಟು 102 ವಿದ್ಯಾರ್ಥಿಗಳಿಗೆ ತಲಾ ₹25 ಸಾವಿರ ವಿದ್ಯಾರ್ಥಿವೇತನವನ್ನು ಪ್ರಾಧಿಕಾರದ ವತಿಯಿಂದ ಮಂಜೂರು ಮಾಡಿರುವ ಅವರು, ‘ಕಳೆದ ಮೂರು ವರ್ಷಗಳಿಂದ ಅನುದಾನ ಕೊರತೆಯಿಂದ ಪ್ರಾಧಿಕಾರವು ಈ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಸ್ಥಗಿತಗೊಳಿಸಿತ್ತು. ಈ ಬಾರಿ ಅನುದಾನದ ಕೊರತೆಯ ನಡುವೆಯೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯಾರ್ಥಿವೇತನ ಮಂಜೂರಾತಿಗೆ ಕ್ರಮವಹಿಸಲಾಗಿದೆ ಎಂದು’ ತಿಳಿಸಿದ್ದಾರೆ.
‘ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ 21 ವಿದ್ಯಾರ್ಥಿಗಳು, ಕಾಸರಗೋಡಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ 27 ವಿದ್ಯಾರ್ಥಿಗಳು, ಮಹಾರಾಷ್ಟ್ರದ ಸೊಲ್ಲಾಪುರದ ಪುಣ್ಯಶ್ಲೋಕ ಅಹಲ್ಯಾದೇವಿ ಹೊಳ್ಕರ ವಿಶ್ವವಿದ್ಯಾಲಯದ 25 ವಿದ್ಯಾರ್ಥಿಗಳು, ಸೊಲ್ಲಾಪುರದ ಸಿಬಿ ಖೇಡಗಿ ಬಸವೇಶ್ವರ ಮಹಾವಿದ್ಯಾಲಯದ 23 ವಿದ್ಯಾರ್ಥಿಗಳು, ಮುಂಬೈ ವಿಶ್ವವಿದ್ಯಾಲಯದ ಇಬ್ಬರು, ಕುಪ್ಪಂನ ದ್ರಾವಿಡ ವಿಶ್ವವಿದ್ಯಾಲಯದ ಮೂವರು ಹಾಗೂ ಚೆನ್ನೈನ ಮದ್ರಾಸ್ ವಿಶ್ವವಿದ್ಯಾಲಯದ ಒಬ್ಬ ವಿದ್ಯಾರ್ಥಿ ಸೇರಿ ಒಟ್ಟು 102 ವಿದ್ಯಾರ್ಥಿಗಳಿಗೆ ತಲಾ ₹25 ಸಾವಿರದಂತೆ ಒಟ್ಟು ₹25.50 ಲಕ್ಷ ಮಂಜೂರು ಮಾಡಲಾಗಿದೆ. ಇದೇ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣವನ್ನು ಜಮೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.
ಮುಚ್ಚಿದ ವಿಭಾಗಗಳು: ‘ಕನ್ನಡ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಕೊರತೆಯಿಂದ ಮಧುರೈನ ಕಾಮರಾಜ ವಿಶ್ವವಿದ್ಯಾಲಯ ಹಾಗೂ ಹೈದರಾಬಾದ್ನ ಉಸ್ಮಾನಿಯ ವಿಶ್ವವಿದ್ಯಾಲಯದ ಕನ್ನಡ ವಿಭಾಗಗಳು ಮುಚ್ಚಲ್ಪಟ್ಟಿವೆ. ಪರಿಸ್ಥಿತಿ ಹೀಗೆ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಉಳಿದ ವಿಶ್ವವಿದ್ಯಾಲಯಗಳ ಕನ್ನಡ ವಿಭಾಗದ ಸ್ಥಿತಿಯು ಇದೇ ಹಂತಕ್ಕೆ ತಲುಪಲಿದೆ’ ಎಂದು ಬಿಳಿಮಲೆ ಆತಂಕ ವ್ಯಕ್ತಪಡಿಸಿದ್ದಾರೆ.
‘ಹೊರ ನಾಡಿನ ಎಂ.ಎ. ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾರ್ಥಿವೇತನ ನೀಡಲು ರಾಜ್ಯ ಸರ್ಕಾರವು ಕೂಡಲೇ ಅನುದಾನ ಬಿಡುಗಡೆ ಮಾಡುವುದರ ಜೊತೆಗೆ, ಈ ವಿಶ್ವವಿದ್ಯಾಲಯಗಳ ಕನ್ನಡ ವಿಭಾಗಗಳನ್ನು ಸಬಲೀಕರಣಗೊಳಿಸಲು ಮುಂದಾಗಬೇಕು’ ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.