ADVERTISEMENT

ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತೆ ಬಂಧನ

​ಪ್ರಜಾವಾಣಿ ವಾರ್ತೆ
Published 9 ಜನವರಿ 2024, 15:46 IST
Last Updated 9 ಜನವರಿ 2024, 15:46 IST
<div class="paragraphs"><p>ಟಿ.ಎ. ನಾರಾಯಣಗೌಡ</p></div>

ಟಿ.ಎ. ನಾರಾಯಣಗೌಡ

   

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ ಜಾಗೃತಿ ಜಾಥಾದ ವೇಳೆ ನಡೆದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮತ್ತೆ ಜೈಲು ಸೇರಿದರು.

ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ಕಡ್ಡಾಯವಾಗಿ ಬಳಸುವಂತೆ ಹಾಗೂ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಭಾಷೆ ಬಳಕೆ ಮಾಡುವಂತೆ ಒತ್ತಾಯಿಸಿ ನಾರಾಯಣಗೌಡ ನೇತೃತ್ವದಲ್ಲಿ ಜಾಥಾ ನಡೆದಿತ್ತು. ಆಗ ಗಲಾಟೆ ನಡೆದು ನಾಮಫಲಕಕ್ಕೆ ಮಸಿ ಬಳಿಯಲಾಗಿತ್ತು. ಚಿಕ್ಕಜಾಲ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಅವರೂ ಸೇರಿದಂತೆ 36 ಕಾರ್ಯಕರ್ತರನ್ನು ಬಂಧಿಸಲಾಗಿತ್ತು.

ADVERTISEMENT

ಶನಿವಾರ ಜಾಮೀನು ಲಭಿಸಿದ್ದರೂ ಆದೇಶ ಪ್ರತಿ ಲಭಿಸದ ಕಾರಣಕ್ಕೆ ಬಿಡುಗಡೆಗೊಂಡಿರಲಿಲ್ಲ. ಮಂಗಳವಾರ ವಕೀಲರು ಜೈಲು ಅಧಿಕಾರಿಗಳಿಗೆ ಜಾಮೀನು ಆದೇಶ ಹಸ್ತಾಂತರಿಸಿದರು. ಅದಾದ ಮೇಲೆ ಬಿಡುಗಡೆಯಾದರು. ಸ್ಥಳದಲ್ಲಿ ಕಾದಿದ್ದ ಕುಮಾರಸ್ವಾಮಿ ಬಡಾವಣೆಯ ಠಾಣೆ ಪೊಲೀಸರು ಅವರನ್ನು ಬಂಧಿಸಿದರು.

‘ಸಾರ್ವಜನಿಕರ ಆಸ್ತಿಗೆ ಹಾನಿ ಮಾಡಿದ ಸಂಬಂಧ 2017ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮತ್ತೆ ಬಂಧಿಸಲಾಗಿದೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಧೀಶರ ಎದುರು ಹಾಜರುಪಡಿಸಿ, ಮತ್ತೆ ಜೈಲಿಗೆ ಕಳುಹಿಸಲಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.