ಬೆಂಗಳೂರು: ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಯಾಗಬೇಕು. ಎಲ್ಲ ಉದ್ಯೋಗಗಳಲ್ಲಿ ಮೀಸಲಾತಿ ಜಾರಿಗೊಳಿಸಲು ಒತ್ತಾಯಿಸಿ ಹೋರಾಟ ಮಾಡಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನೇತೃತ್ವದಲ್ಲಿ ಶನಿವಾರ ನಡೆದ ಪಕ್ಷಾತೀತ ಸಮಾಲೋಚನಾ ಸಭೆಯಲ್ಲಿ ನಿರ್ಧರಿಸಲಾಗಿದೆ.
ಶೀಘ್ರದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಕನ್ನಡ ಮತ್ತು ರಾಜ್ಯದ ಹಿತಾಸಕ್ತಿ ಕಾಪಾಡುವ ಹಕ್ಕೊತ್ತಾಯಗಳನ್ನು ಮಂಡಿಸಲು ತೀರ್ಮಾನಿಸಲಾಯಿತು.
ನವೆಂಬರ್ ತಿಂಗಳಿನಲ್ಲಿ ಹಕ್ಕೊತ್ತಾಯ ಸಮಾವೇಶ ಹಮ್ಮಿಕೊಳ್ಳಬೇಕು. ಈ ಬಗ್ಗೆ ಚರ್ಚಿಸಲು ಎಲ್ಲ ಹೋರಾಟಗಾರರನ್ನು ಅಹ್ವಾನಿಸಿ, ಮತ್ತೊಂದು ವಿಸ್ತೃತ ಸಭೆ ಕರೆಯಲು ನಿರ್ಧರಿಸಲಾಯಿತು.
ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ ಅಧ್ಯಕ್ಷತೆ ವಹಿಸಿದ್ದರು. ಕೆ.ಆರ್.ಎಸ್. ಪಕ್ಷದ ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು, ಕನ್ನಡ ಹೋರಾಟಗಾರ ಸಾ.ರಾ. ಗೋವಿಂದ, ಕನ್ನಡ ರಕ್ಷಣಾ ವೇದಿಕೆಯ ಶಿವರಾಮೇಗೌಡ, ಬನವಾಸಿ ಬಳಗದ ಆನಂದ್ ಜಿ. ಅರುಣ್ ಜಾವಗಲ್, ಕನ್ನಡ ಪಕ್ಷದ ಪುರುಷೋತ್ತಮ್, ಹೋರಾಟಗಾರರಾದ ಸಿ.ಕೆ. ರಾಮೇಗೌಡ, ರಮೇಶ್ ಬೆಲ್ಲಂಕೊಂಡ, ಅಖಿಲ ಭಾರತ ವಿಚಾರ ವೇದಿಕೆಯ ನಾಗೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ಸದ್ಭಾವನಾ ಪ್ರಕಾಶ್ಮೂರ್ತಿ, ನಟ ಚೇತನ್ ಅಹಿಂಸಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.