ವಿಧಾನಸೌಧ
ಬೆಂಗಳೂರು: ‘ಹೈಕೋರ್ಟ್ ನ್ಯಾಯಮೂರ್ತಿಗಳಿಗಾಗಿ ಬಹುಮಹಡಿ ಕಟ್ಟಡ ನಿರ್ಮಿಸಲು ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನ ಆವರಣದ ನಾಲ್ಕು ಎಕರೆ ಜಾಗವನ್ನು ನೀಡುವಂತೆ ರಾಜ್ಯ ಸರ್ಕಾರ ತಿಳಿಸಿದ್ದು, ಈಗಾಗಲೇ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ’ ಎಂದು ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ತಿಳಿಸಿದೆ.
‘ಈ ಭಾಗದ ಏಳು ಎಕರೆ ಪ್ರದೇಶದಲ್ಲಿ ವಿಶ್ವವಿದ್ಯಾಲಯವು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ₹ 50 ಕೋಟಿ ವೆಚ್ಚದಲ್ಲಿ ಪಶುಗಳಿಗೆ ಸಂಬಂಧಿಸಿದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಪೆಟ್ ಪಾರ್ಕ್ ನಿರ್ಮಿಸಲು ಉದ್ದೇಶಿಸಿದೆ. ಇದರಲ್ಲಿ ಪಶುಗಳಿಗೆ ಎಂಆರ್ಐ ಸ್ಕ್ಯಾನ್ ಸೇರಿದಂತೆ ಆಧುನಿಕ ತಂತ್ರಜ್ಞಾನಗಳನ್ನು ಒಳಗೊಂಡ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವ ಯೋಜನೆ ಇದೆ. ಪೆಟ್ ಪಾರ್ಕ್ನಲ್ಲಿ ಪ್ರಾಣಿಗಳಿಗೆ ನಿತ್ಯದ ಚಟುವಟಿಕೆಗಳನ್ನು ನಡೆಸಲು ಸಹಾಯವಾಗಲಿದೆ. ಈ ಬಗ್ಗೆ 2024ರಲ್ಲಿ ವಿಶ್ವವಿದ್ಯಾಲಯದ ಬೋರ್ಡ್ನಲ್ಲಿ ನಿರ್ಣಯವನ್ನು ತೆಗೆದುಕೊಂಡಿದೆ’ ಎಂದು ವಿಶ್ವವಿದ್ಯಾಲಯದ ಮೂಲಗಳು ತಿಳಿಸಿವೆ.
‘ಹೆಬ್ಬಾಳದ ಪಶು ವೈದ್ಯಕೀಯ ಕಾಲೇಜಿನ ಆವರಣದ ಜಮೀನನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಗದೀಶ್, ಕಂದಾಯ ಇಲಾಖೆಯ ಹಲವಾರು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೈಕೋರ್ಟ್ನ ನ್ಯಾಯಮೂರ್ತಿಯೊಬ್ಬರು ಬಂದು ಸ್ಥಳದ ಪರೀಕ್ಷೆ ಮಾಡಿದ್ದಾರೆ. ಮುಖ್ಯಮಂತ್ರಿಯವರ ಆದೇಶದ ಮೇರೆಗೆ ಈ ಸಮೀಕ್ಷೆ ಕೈಗೊಂಡಿರುವ ಮಾಹಿತಿ ಇದ್ದು, ಈ ಬಗ್ಗೆ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರಿಗೆ ಮಾಹಿತಿ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ’ ಎಂದು ಹೇಳಿವೆ.
‘ಈ ಜಮೀನಿನಲ್ಲಿ ಪಶುಗಳಿಗೆ ಸಂಬಂಧಿಸಿದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈಗ ಬಹಮಹಡಿ ಕಟ್ಟಡ ನಿರ್ಮಿಸಲು ನಾಲ್ಕು ಎಕರೆ ಜಮೀನು ನೀಡಿದರೆ, ಆಸ್ಪತ್ರೆ ನಿರ್ಮಿಸಲು ಸಮಸ್ಯೆ ಆಗಲಿದೆ. ಆದ್ದರಿಂದ ಈ ಜಮೀನು ಬಿಟ್ಟು ಕೊಡುವುದಕ್ಕೆ ಆಗುವುದಿಲ್ಲವೆಂದು ರಾಜ್ಯ ಸರ್ಕಾರಕ್ಕೆ ತಿಳಿಸಲಾಗಿದೆ’ ಎಂದು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.