ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪಚ್ಚನಾಡಿ ನೆಲಭರ್ತಿ ಘಟಕದಲ್ಲಿ ಸಂಭವಿಸಿದ ಭೂಕುಸಿತದಿಂದ ತೊಂದರೆಗೆ ಸಿಲುಕಿದವರಿಗೆ ಪರಿಹಾರ ನೀಡಲು ವಿಫಲವಾಗಿರುವ ಮಂಗಳೂರು ನಗರ ಪಾಲಿಕೆ ಆಯುಕ್ತರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
‘ಪಾಲಿಕೆ ನಿಗದಿಪಡಿಸಿರುವ ಪರಿಹಾರ ಪಡೆಯಬೇಕು ಎಂದು ಸಂತ್ರಸ್ತರ ಮೇಲೆ ಒತ್ತಡ ಹೇರಲಾಗುತ್ತಿದೆ. ನಿರ್ಧಾರ ತೆಗೆದುಕೊಳ್ಳುವಾಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಪರಿಗಣಿಸಿಲ್ಲ’ ಎಂದು ಅರ್ಜಿದಾರರ ಪರ ವಕೀಲ ಶ್ರೀಧರ್ ಪ್ರಭು ಹೇಳಿದರು.
ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದ 102 ಸಂತ್ರಸ್ತರ ಪೈಕಿ 35 ಕುಟುಂಬಕ್ಕೆ ಮಾತ್ರ ಪರಿಹಾರ ನೀಡಿರುವುದನ್ನು ಗಮನಿಸಿತು.
‘ಪರಿಹಾರಕ್ಕೆ ಸಂಬಂಧಿಸಿದ ನಿಖರ ಮಾಹಿತಿಯನ್ನು ಆಯುಕ್ತರು ನೀಡುತ್ತಿಲ್ಲ. ಹೀಗಾಗಿ, ಈ ವಿಷಯಕ್ಕೆ ಸಂಬಂಧಿಸಿದ ಎಲ್ಲ ಕಡತಗಳನ್ನು ಸಲ್ಲಿಸಬೇಕು ಎಂದು ನಿರ್ದೇಶನ ನೀಡಲಾಗುತ್ತಿದೆ’ ಎಂದು ಪೀಠ ಹೇಳಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.