ಕರ್ನಾಟಕ ಹೈಕೋರ್ಟ್
ಬೆಂಗಳೂರು: ‘ಅಪರಾಧ ಘಟಿಸಿದಾಗ ಸಂತ್ರಸ್ತರ ಕುಟುಂಬವು ಗಾಯಾಳು ಬಗ್ಗೆ ಕಾಳಜಿ ತೋರುತ್ತದೆಯೇ ಹೊರತು ಪೊಲೀಸರಿಗೆ ದೂರು ನೀಡುವ ಬಗ್ಗೆ ಅಲ್ಲ’ ಎಂದು ಹೈಕೋರ್ಟ್ ಪ್ರಕರಣವೊಂದರಲ್ಲಿ ಅಭಿಪ್ರಾಯಪಟ್ಟಿದೆ.
ದಾವಣಗೆರೆ ಜಿಲ್ಲಾ ಒಂದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಹೊನ್ನಾಳಿ ತಾಲ್ಲೂಕು ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಟಿ.ಗೋಪಗೊಂಡನ ಹಳ್ಳಿ ಮಂಜಪ್ಪ (55) ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ.
‘ಕೊಲೆ ಪ್ರಕರಣದಲ್ಲಿ ದೂರುದಾರರು ದೂರು ದಾಖಲಿಸುವಲ್ಲಿ ವಿಳಂಬ ಮಾಡಿದ್ದರೆ ಅದು ಆರೋಪಿಯನ್ನು ಖುಲಾಸೆಗೊಳಿಸಲು ಆಧಾರವಾಗುವುದಿಲ್ಲ’ ಎಂದು ಸ್ಪಷ್ಟಪಡಿಸಿರುವ ನ್ಯಾಯಪೀಠ ‘ವಿಚಾರಣಾ ನ್ಯಾಯಾಲಯದ ತೀರ್ಪು ರದ್ದುಗೊಳಿಸಲು ನಮಗೆ ಯಾವುದೇ ಆಧಾರಗಳು ಕಂಡುಬರುವುದಿಲ್ಲ’ ಎಂದು ಹೇಳಿದೆ.
ಪ್ರಕರಣವೇನು: ‘ಶಿವಕುಮಾರ್ ಮಂಜಪ್ಪನ ಮಗಳನ್ನು ಪ್ರೀತಿಸಿ ಮದುವೆಯಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದು ಶಿವಕುಮಾರ್ ಆಗ್ಗಾಗ್ಗೆ ಹಣಕ್ಕಾಗಿ ಪೀಡಿಸುತ್ತಿದ್ದ ಕಾರಣಕ್ಕೆ ಮಾವ-ಅಳಿಯನ ಜತೆ ಗಲಾಟೆ ನಡೆಯುತ್ತಿತ್ತು. ಇಂತಹುದೇ ಒಂದು ಸನ್ನಿವೇಶದಲ್ಲಿ ಶಿವಕುಮಾರ್ 2017ರ ಅಕ್ಟೋಬರ್ 6ರಂದು ಟಿ.ಗೋಪಗೊಂಡನ ಹಳ್ಳಿಯ ಮನೆಯಲ್ಲಿ ಮಲಗಿದ್ದಾಗ ಮಂಜಪ್ಪ ಶಿವಕುಮಾರ್ಗೆ ಮರದ ದಿಮ್ಮಿ ತೆಗೆದುಕೊಂಡು ಹೊಟ್ಟೆಯ ಮೇಲೆ ಬಲವಾಗಿ ಹೊಡೆದಿದ್ದ. ಪರಿಣಾಮ ಕೆಲ ದಿನಗಳ ಬಳಿಕ ಶಿವಕುಮಾರ್ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದರು’ ಎಂದು ದೋಷಾರೋಪ ಪಟ್ಟಿಯಲ್ಲಿ ವಿವರಿಸಲಾಗಿತ್ತು.
ಮಂಜಪ್ಪನ ವಿರುದ್ಧ ಮಗಳು ನೀಡಿದ್ದ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯ ಭಾರತೀಯ ದಂಡ ಸಂಹಿತೆ–1860ರ ಕಲಂ 302ರ ಪ್ರಕಾರ ಮಂಜಪ್ಪ ಅಪರಾಧಿ ಎಂದು ಸಾರಿ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.