ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ನವೆಂಬರ್ ತಿಂಗಳು ಪೂರ್ತಿ ಪುಸ್ತಕಗಳ ಖರೀದಿ ಮೇಲೆ ಶೇ 50ರಷ್ಟು ರಿಯಾಯಿತಿ ಘೋಷಿಸಿದೆ.
‘ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 700ಕ್ಕೂ ಅಧಿಕ ಶೀರ್ಷಿಕೆಗಳಡಿ ಕೃತಿಗಳನ್ನು ಪ್ರಕಟಿಸಿದೆ. ಈ ಕೃತಿಗಳನ್ನು ಜನಸಾಮಾನ್ಯರಿಗೆ ಕೈಗೆಟುಕುವ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಪ್ರಾಧಿಕಾರದ್ದಾಗಿದ್ದು, ಎಲ್ಲ ಪುಸ್ತಕಗಳ ಮೇಲೆ ಶೇ 50ರಷ್ಟು ರಿಯಾಯಿತಿ ಇರಲಿದೆ’ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ, ಎಲ್ಲ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಪ್ರಾಧಿಕಾರದಿಂದ ತೆರೆಯಲಾದ ಎಲ್ಲ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಇರಲಿದೆ. ಪ್ರಾಧಿಕಾರದ ಜಾಲತಾಣ https://kpp.karnataka.gov.in ಮೂಲಕವೂ ಖರೀದಿಸಬಹುದು ಎಂದು ಹೇಳಿದ್ದಾರೆ.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳನ್ನು ಆನ್ಲೈನ್ ಮೂಲಕವೂ ಶೇ 50ರ ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದೆ. ಪುಸ್ತಕಗಳನ್ನು ಪ್ರಾಧಿಕಾರದ ಜಾಲತಾಣ www.kuvempubhashabharathi.karnataka.gov.in ಮೂಲಕ ಪಡೆಯಬಹುದು ಎಂದು ಪ್ರಾಧಿಕಾರದ ರಿಜಿಸ್ಟ್ರಾರ್ ಈಶ್ವರ್ ಕು. ಮಿರ್ಜಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.