ಬೆಂಗಳೂರು: ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಯಲ್ಲಿ ಬಿಬಿಎಂಪಿ ಭ್ರಷ್ಟಾಚಾರ ನಡೆಸಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷ ಆರೋಪಿಸಿದೆ.
‘ಸಾರ್ವಜನಿಕ ಶೌಚಾಲಯಗಳಲ್ಲಿ ಮೂತ್ರವಿಸರ್ಜನೆ ಉಚಿತ ಎಂದು ಅಧಿಕಾರಿಗಳೇ ಹೇಳಿದ್ದಾರೆ. ಆದರೂ, ಶೌಚಾಲಯಗಳಲ್ಲಿ ಮನಬಂದಂತೆ ಹಣ ವಸೂಲಿ ಮಾಡಲಾಗುತ್ತಿದೆ. ಈ ಬಗ್ಗೆ ಪಾಲಿಕೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಎಸ್.ಮಂಜುನಾಥ್ ದೂರಿದ್ದಾರೆ.
‘ಶೌಚಾಲಯಗಳ ನಿರ್ವಹಣೆಯ ಹೆಸರಿನಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಲೋಕಾಯುಕ್ತ ಅಥವಾ ಎಸಿಬಿ ತನಿಖೆಯಾಗಬೇಕು. ಅದರಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ನೌಕರರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.’
‘ಪ್ರತಿ ಶೌಚಾಲಯದ ಮುಂದೆ ಅದರ ನಿರ್ವಹಣೆ ಗುತ್ತಿಗೆ ಪಡೆದವರ ಪೂರ್ಣವಿವರ, ಅಧಿಕಾರಿಗಳ ಸಂಪರ್ಕ, ಶುಲ್ಕ ವಿವರದ ಫಲಕ ಪ್ರದರ್ಶಿಸಬೇಕು. ಶೌಚಾಲಯಗಳಿಗೆ ಜಲಮಂಡಳಿಯಿಂದ ನಿರಂತರವಾಗಿ ನೀರು ಪೂರೈಕೆಯಾಗಬೇಕು. ಪಾಲಿಕೆ ಕಚೇರಿಗಳು ಹಾಗೂ ವಾಣಿಜ್ಯ ಮಳಿಗೆಗಳಲ್ಲಿನ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.