ADVERTISEMENT

ಬೆಂಗಳೂರು | ಆಗಸ್ಟ್‌ 3ರಂದು ಕಸಾಪ ಉಳಿಸಿ ಜಾಗೃತಿ ಸಮಾವೇಶ

​ಪ್ರಜಾವಾಣಿ ವಾರ್ತೆ
Published 28 ಜುಲೈ 2025, 15:18 IST
Last Updated 28 ಜುಲೈ 2025, 15:18 IST
   

ಬೆಂಗಳೂರು: ಮಂಡ್ಯದ ಕನ್ನಡ ನಾಡು ನುಡಿ ಜಾಗೃತಿ ಸಮಿತಿಯಿಂದ ಆಗಸ್ಟ್‌ 3ರಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಪುರಭವನದಲ್ಲಿ ‘ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಉಳಿಸಿ ಜಾಗೃತಿ ಸಮಾವೇಶ’ ಆಯೋಜಿಸಲಾಗಿದೆ.  

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕರಾದ ಎಸ್.ಜಿ. ಸಿದ್ಧರಾಮಯ್ಯ, ಜಯಪ್ರಕಾಶಗೌಡ, ಮಾವಳ್ಳಿ ಶಂಕರ್, ಸುನಂದಾ ಜಯರಾಮ್, ‘ಕನ್ನಡದ ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದಗಳ ಬಲವರ್ಧನೆಗೆ ಸ್ಥಾಪನೆಗೊಂಡಿದ್ದ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು ಈಗ ಸರ್ವಾಧಿಕಾರ ಹಾಗೂ ಭ್ರಷ್ಟಾಚಾರದ ಕೂಪವಾಗಿದೆ’ ಎಂದು ದೂರಿದರು.  

‘ಕನ್ನಡ ಸಾಹಿತ್ಯ ಪರಿಷತ್ತಿನ ಈಗಿನ ಅಧ್ಯಕ್ಷರು ಆಡಳಿತಾತ್ಮಕವಾಗಿ ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ. ಜನಸ್ನೇಹಿಯಾಗಿದ್ದ ಪರಿಷತ್ತಿನ ನಿಬಂಧನೆಗಳಿಗೆ ವಾಮ ಮಾರ್ಗದಲ್ಲಿ ತಿದ್ದುಪಡಿ ಮಾಡಿ, ಅಧಿಕಾರ ಕೇಂದ್ರೀಕರಣ ಮಾಡುತ್ತಿದ್ದಾರೆ. ಆಡಳಿತ ಮಂಡಳಿಯ ಚುನಾಯಿತ ಪ್ರತಿನಿಧಿಗಳನ್ನು ಹೆದರಿಸಿ, ಬೆದರಿಸಿ, ಅವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ನಾಮ ನಿರ್ದೇಶಿತ ಸದಸ್ಯರ ಸಂಖ್ಯೆ ಹೆಚ್ಚಿಸಿಕೊಂಡು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ. ಇದನ್ನು ನಾವೆಲ್ಲರೂ ಪ್ರಶ್ನಿಸಬೇಕಾಗಿದೆ’ ಎಂದು ಹೇಳಿದರು.

ADVERTISEMENT

‘ರಾಜ್ಯ ಸರ್ಕಾರ ಹಾಗೂ ಕಾರ್ಪೊರೇಟ್‌ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಸ್‌ಆರ್) ಕನ್ನಡ ಸಾಹಿತ್ಯ ಪರಿಷತ್ತಿಗೆ ಹರಿದು ಬರುವ ಅನುದಾನವನ್ನು ಲೂಟಿ ಮಾಡಲಾಗುತ್ತಿದೆ. ಪರಿಷತ್ತಿನ ಅಧ್ಯಕ್ಷರ ದುರಾಡಳಿತದ ವಿರುದ್ಧ ಪ್ರತಿಯೊಬ್ಬರೂ ಗಟ್ಟಿಯಾಗಿ ನಿಲ್ಲಬೇಕಾಗಿದೆ’ ಎಂದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.