ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ಅವರು ‘ಕಸಾಪ ಗೌರವ ಪ್ರಶಸ್ತಿ’ ಸ್ಥಾಪಿಸಿದ್ದು, ತಮ್ಮ ಅವಧಿಯ ಸಂಪೂರ್ಣ ಗೌರವ ಧನದ ಬಡ್ಡಿ ಹಣದಲ್ಲಿ ನಗದು ಬಹುಮಾನ ನೀಡಲು ನಿರ್ಧರಿಸಿದ್ದಾರೆ.
ಗೌರವ ಧನ ರೂಪದಲ್ಲಿ ಬಂದ ₹12.20 ಲಕ್ಷವನ್ನು ಬ್ಯಾಂಕಿನಲ್ಲಿ ನಿಶ್ಚಿತ ಠೇವಣಿಯಾಗಿರಿಸಿ, ಅದರಿಂದ ಬರುವ ಬಡ್ಡಿ ಹಣದಲ್ಲಿ ಪ್ರತಿ ವರ್ಷ ಇಬ್ಬರು ಸಾಹಿತಿಗಳಿಗೆ ಈ ಪ್ರಶಸ್ತಿ ನೀಡಲು ಅವರು ನಿರ್ಧರಿಸಿದ್ದಾರೆ. ಸೋಮವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದರು.
ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ, 60 ವರ್ಷ ಮೇಲ್ಪಟ್ಟ ಇಬ್ಬರಿಗೆ (ಮಹಿಳೆ ಮತ್ತು ಪುರುಷ) ತಲಾ ₹30 ಸಾವಿರ ನಗದು, ಸ್ಮರಣಿಕೆ ನೀಡಿ ಗೌರವಿಸಲಾಗುವುದು. ಪ್ರತಿ ವರ್ಷ ಮೇ ತಿಂಗಳಲ್ಲಿ ಕಸಾಪ ವತಿಯಿಂದ ಕಾರ್ಯಕ್ರಮ ಹಮ್ಮಿಳ್ಳಲು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಬಿ.ಟಿ. ಲಲಿತಾ ನಾಯಕ್, ಡಾ. ವಸುಂಧರಾ ಭೂಪತಿ, ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಪದ್ಮರಾಜ ದಂಡಾವತಿ, ಕೆ. ರಾಜಕುಮಾರ್, ಗೌರವ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ ಸಭೆಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.