ಬೆಂಗಳೂರು: ‘ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದಿಂದ ನೀಡುವ 2025ನೇ ಸಾಲಿನ ‘ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ’ ಪ್ರಶಸ್ತಿಗೆ ಬೆಂಗಳೂರಿನ ಪ್ರಹ್ಲಾದ್ ರಾಮರಾವ್ (ವಿಜ್ಞಾನ), ಅಮರನಾಥ್ಗೌಡ (ಉದ್ಯಮ), ಕೆ.ಪಿ. ಗೋಪಾಲ್ ಕೃಷ್ಣ (ಶಿಕ್ಷಣ) ಆಯ್ಕೆಯಾಗಿದ್ದಾರೆ’ ಎಂದು ಪ್ರತಿಷ್ಠಾನದ ಅಧ್ಯಕ್ಷ ಎಂ. ಕೃಷ್ಣೇಗೌಡ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಶಸ್ತಿಯು ತಲಾ ₹2 ಲಕ್ಷ ನಗದು ಹಾಗೂ ಬೆಳ್ಳಿ ಪದಕವನ್ನು ಒಳಗೊಂಡಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 25 ಮಂದಿಗೆ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ನೀಡುತ್ತಿದ್ದು, ಪ್ರಶಸ್ತಿಯು ₹25 ಸಾವಿರ ನಗದು, ಬೆಳ್ಳಿ ಪದಕವನ್ನು ಒಳಗೊಂಡಿದೆ’ ಎಂದು ಮಾಹಿತಿ ನೀಡಿದರು.
‘ಜೂನ್ 27ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದು, ರಾಜ್ಯಪಾಲ ಥಾವರಚಂದ್ ಗೆಹಲೋತ್, ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪ್ರತಿಷ್ಠಾನದ ಸಂಚಾಲಕ ಕಾಂತರಾಜು, ಸದಸ್ಯ, ಮಂಜುನಾಥ್, ಬಿಬಿಎಂಪಿ ಮಾಜಿ ಸದಸ್ಯ ಗುಣಶೇಖರ್ ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.