ಸಾಂದರ್ಭಿಕ ಚಿತ್ರ
ಬೆಂಗಳೂರು: ಮಾಗಡಿ ಪುರಸಭೆಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಸ್ಥಳಾಂತರ ಮಾಡುವುದು ಹಾಗೂ ಅದರ ಸುತ್ತಮುತ್ತ ಇರುವ 400ಕ್ಕೂ ಹೆಚ್ಚು ಮರಗಳ ಹನನ ಮಾಡಲು ಹೊರಟಿರುವ ಪುರಸಭೆ ಮತ್ತು ಸ್ಥಳೀಯ ಶಾಸಕರ ನಡೆ ಖಂಡನೀಯ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ತಿಳಿಸಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ, ‘ಮಾಗಡಿ ಪುರಸಭೆ ಮುಂಭಾಗದಲ್ಲಿ ಇರುವ ಕೆಂಪೇಗೌಡರ ಪ್ರತಿಮೆಯನ್ನು ಸ್ಥಳಾಂತರ ಮಾಡಿದರೆ ಹೋರಾಟ ಮಾಡಲಾಗುವುದು. ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಾಲಕೃಷ್ಣ ಹಾಗೂ ಪುರಸಭೆಯ ಅಧಿಕಾರಿಗಳು ಕೆಂಪೇಗೌಡರ ಪರಂಪರೆಗೆ ಚ್ಯುತಿ ತರುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
‘ನಾಡು ಕಟ್ಟಿದ ಕೆಂಪೇಗೌಡರಿಗೆ ಅವರ ನೆಲೆಯಲ್ಲೇ ಪ್ರತಿಮೆಗೆ ಸ್ಥಳಾವಕಾಶ ಇಲ್ಲದಂತಾಗಿದೆ. ಕೆಂಪೇಗೌಡರ ಪ್ರತಿಮೆ 22 ವರ್ಷಗಳ ಹಿಂದೆ ಪುರಸಭೆ ಮುಂಭಾಗದಲ್ಲಿ ಪ್ರತಿಷ್ಠಾಪಿಸಲಾಗಿದೆ. ಪ್ರತಿವರ್ಷ ಕೆಂಪೇಗೌಡ ಜನ್ಮ ದಿನಾಚರಣೆ ಅದ್ದೂರಿಯಾಗಿ ಅಚರಿಸಿಕೊಂಡು ಬರಲಾಗುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಳಾಂತರ ಮಾಡಲು ಬಿಡುವುದಿಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.