ನಂದಿನಿ
ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಮಹಾಮಂಡಳದ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ‘ಬಣ’ದ ನಡುವೆ ಪೈಪೋಟಿ ನಡೆಯುವ ಲಕ್ಷಣಗಳು ಕಂಡುಬರುತ್ತಿವೆ.
ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ಅಧ್ಯಕ್ಷ ಡಿ.ಕೆ. ಸುರೇಶ್, ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಹಾಲು ಒಕ್ಕೂಟದ (ರಾಬಕೊವಿ) ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್, ಕೋಲಾರ ಹಾಲು ಒಕ್ಕೂಟದ (ಕೋಮುಲ್) ಅಧ್ಯಕ್ಷ ಕೆ.ವೈ. ನಂಜೇಗೌಡ ಅವರು ಕೆಎಂಎಫ್ ಅಧ್ಯಕ್ಷ ಪಟ್ಟಕ್ಕೆ ಪ್ರಬಲ ಆಕಾಂಕ್ಷಿಗಳಾಗಿ ಮುಂಚೂಣಿಯಲ್ಲಿದ್ದಾರೆ.
ಮೇಲ್ನೋಟಕ್ಕೆ ಈ ಮೂವರ ನಡುವೆ ತ್ರಿಕೋನ ಪೈಪೋಟಿಯಂತೆ ಕಂಡರೂ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ರಾಘವೇಂದ್ರ ಹಿಟ್ನಾಳ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಯುವುದು ಬಹುತೇಕ ಖಚಿತ. ರಾಜಕೀಯ ಅಂಗಳದ ಶೀತಲ ಸಮರ ಈ ಚುನಾವಣೆ ಮೂಲಕ ಸಹಕಾರ ರಂಗಕ್ಕೂ ಕಾಲಿಡುವಂತೆ ಕಾಣುತ್ತಿದೆ ಎಂದು ಮೂಲಗಳು ಹೇಳಿವೆ.
ರಾಜ್ಯದಲ್ಲಿ ಒಟ್ಟು 16 ಹಾಲು ಒಕ್ಕೂಟಗಳಿವೆ. ಇನ್ನು ಎರಡು ತಿಂಗಳಲ್ಲಿ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟೇ ಬಮೂಲ್ ಚುನಾವಣೆಗೆ ಸ್ಪರ್ಧಿಸಿದ್ದ ಡಿ.ಕೆ.ಸುರೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ್ ವಲಯದಲ್ಲಿ ವಿಶ್ಲೇಷಿಸಲಾಗಿದೆ. ಇತ್ತೀಚೆಗೆ ಕೋಮುಲ್ ಅಧ್ಯಕ್ಷರಾಗಿ ಆಯ್ಕೆಯಾದ ಮಾಲೂರು ಶಾಸಕ ಕೆ.ವೈ. ನಂಜೇಗೌಡ ಕೂಡ, ‘ಕೆಎಂಎಫ್ ಅಧ್ಯಕ್ಷ ಸ್ಥಾನ ನನಗೇ ಸಿಗುವ ವಿಶ್ವಾಸವಿದೆ. ಭೀಮಾನಾಯ್ಕ ನಂತರ ಅಧ್ಯಕ್ಷ ಸ್ಥಾನವನ್ನು ನನಗೆ ಕೊಡಬೇಕೆಂದು ಮಾತುಕತೆ ಆಗಿತ್ತು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನನ್ನ ಪರವಾಗಿ ಮುಖ್ಯಮಂತ್ರಿ ಬಳಿ ಮಾತಾಡಿದ್ದರು’ ಎಂದು ಹೇಳಿಕೊಂಡಿದ್ದರು.
ರಾಬಕೊವಿಗೆ ಅಧ್ಯಕ್ಷರಾಗಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಆಯ್ಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ‘ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತೇನೆ’ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ರಾಘವೇಂದ್ರ ಹಿಟ್ನಾಳ್ ಇತ್ತೀಚೆಗೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಕೆಎಂಎಫ್ ಅಧ್ಯಕ್ಷ ಸ್ಥಾನದ ವಿಷಯ ಕುರಿತು ಚರ್ಚಿಸಿದ್ದರು.
ರಾಘವೇಂದ್ರ ಹಿಟ್ನಾಳ್ ಅವರಿಗೆ ಅಧ್ಯಕ್ಷ ಸ್ಥಾನ ಕೊಡಿಸಲು ಸಿದ್ದರಾಮಯ್ಯ ಆಪ್ತ ಬಳಗ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದೆ. ಇತ್ತ ಅಧ್ಯಕ್ಷ ಸ್ಥಾನಕ್ಕಾಗಿ ತಮ್ಮ ಸಹೋದರನಿಗೆ ಪಟ್ಟ ಕಟ್ಟಲು ಡಿ.ಕೆ. ಶಿವಕುಮಾರ್ ರಣತಂತ್ರ ರೂಪಿಸುತ್ತಿದ್ದಾರೆ ಎಂಬ ಮಾಹಿತಿಯಿದೆ. ಡಿ.ಕೆ.ಸುರೇಶ್ ವಿರುದ್ಧ ಹಿಟ್ನಾಳ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ನಲ್ಲೇ ಪೈಪೋಟಿ ಹೆಚ್ಚಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.