ಸಾವು
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಭಾನುವಾರ ಆರೋಪಿ ತೆನ್ನಿರಾ ಮೈನಾ ಅವರು ಹೆಣ್ಣೂರು ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದರು.
ಮೃತ ವಿನಯ್ ಸೋಮಯ್ಯ ಆತ್ಮಹತ್ಯೆಗೂ ಮೊದಲು ತನ್ನ ವಿರುದ್ಧ ರಾಜಕೀಯ ಪ್ರೇರಿತ ಎಫ್ಐಆರ್ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಕೊಡಗಿನ ಶಾಸಕರಾದ ಮಂಥರ್ ಗೌಡ, ಎ.ಎಸ್.ಪೊನ್ನಣ್ಣ ಹಾಗೂ ಕೊಡಗು ಕಾಂಗ್ರೆಸ್ ಮುಖಂಡ ತೆನ್ನೀರಾ ಮೈನಾ ಹೆಸರು ಉಲ್ಲೇಖಿಸಿ ಮರಣಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಹೆಣ್ಣೂರು ಠಾಣೆ ಪೊಲೀಸರು ತೆನ್ನಿರಾಗೆ ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಿದ್ದರು.
ಆತ್ಮಹತ್ಯೆಗೂ ತನಗೂ ಸಂಬಂಧವಿಲ್ಲ: ‘ನನಗೂ ಹಾಗೂ ಮೃತ ವಿನಯ್ ಸೋಮಯ್ಯಗೂ ವೈಯಕ್ತಿಕ ದ್ವೇಷ ಇಲ್ಲ. ವಿನಯ್ ಅಡ್ಮಿನ್ ಆಗಿದ್ದ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಕುರಿತು ಅಪಹಾಸ್ಯ ಮಾಡುವ ಪೋಸ್ಟ್ ಹಂಚಿಕೊಂಡಿದ್ದರು. ಹಾಗಾಗಿ ವಿನಯ್ ಸೋಮಯ್ಯ ಸೇರಿ ಗ್ರೂಪ್ನ ಮೂವರು ಸದಸ್ಯರ ವಿರುದ್ಧ ಮಡಿಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದೆ. ಅದರಂತೆ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸಿದ್ದರು’ ಎಂದು ತೆನ್ನಿರಾ ಮೈನಾ ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಾಗಿದೆ.
‘ಈ ಪ್ರಕರಣದಲ್ಲಿ ಮೂವರು ಆರೋಪಿಗಳು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ಹೀಗಾಗಿ ವಿನಯ್ ಸೋಮಯ್ಯ ಆತ್ಮಹತ್ಯೆಗೂ ತಮಗೂ ಯಾವುದೇ ಸಂಬಂಧವಿಲ್ಲ’ ಎಂದು ತನಿಖಾಧಿಕಾರಿ ಎದುರು ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮತ್ತೊಂದೆಡೆ, ವಿನಯ್ ಸೋಮಯ್ಯ ಮರಣಪತ್ರದಲ್ಲಿ ಉಲ್ಲೇಖಿಸಿರುವ ಮಂಥರ್ ಗೌಡ ಮತ್ತು ಎ.ಎಸ್.ಪೊನ್ನಣ್ಣ ಅವರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಇಬ್ಬರಿಗೂ ನೋಟಿಸ್ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣದ ಹಿನ್ನೆಲೆ:
ಕೊಡಗು ಮೂಲದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಪತ್ನಿ ಹಾಗೂ ಮಗು ಜತೆಗೆ ನಗರದಲ್ಲಿ ನೆಲಸಿದ್ದರು. ನಾಗವಾರದ ಎಚ್ಬಿಆರ್ ಲೇಔಟ್ನ ಖಾಸಗಿ ಕಂಪನಿಯಲ್ಲಿ ಕಾರ್ಯಾಚರಣೆ ವಿಭಾಗದ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಏಪ್ರಿಲ್ 4ರಂದು ಮುಂಜಾನೆ ತಾನು ಕೆಲಸ ಮಾಡುವ ಕಂಪನಿ ಗೋದಾಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.