ಬೆಂಗಳೂರು: ಕ್ವೀನ್ಸ್ ರಸ್ತೆಯಲ್ಲಿರುವ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಕಟ್ಟಡದಲ್ಲಿ ಗುರುವಾರ ಬೆಳಿಗ್ಗೆ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
‘ಕೊರೊನಾ ಹಿನ್ನೆಲೆಯಲ್ಲಿ ಪದಗ್ರಹಣ ಸಮಾರಂಭಕ್ಕೆ ಕೆಲವರಿಗಷ್ಟೇ ಆಹ್ವಾನ ನೀಡಲಾಗಿದೆ. 10.15ಕ್ಕೆ ಧ್ವಜಾರೋಹಣ ಮೂಲಕ ಆರಂಭವಾಗುವ ಕಾರ್ಯಕ್ರಮ ಟಿವಿ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ನೇರ ಪ್ರಸಾರವಾಗಲಿದೆ. ಹೀಗಾಗಿ, ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಅವರವರ ಕ್ಷೇತ್ರಗಳಲ್ಲೇ ಇದ್ದು ವೀಕ್ಷಿಸಬೇಕು’ ಎಂದು ಶಿವಕುಮಾರ್ ಮನವಿ ಮಾಡಿದ್ದಾರೆ.
‘ಶಿವಕುಮಾರ್ ಪ್ರತಿಜ್ಞೆ ಸ್ವೀಕರಿಸುವ ಸಂದರ್ಭದಲ್ಲಿ 150 ನಾಯಕರು ಮಾತ್ರ ಉಪಸ್ಥಿತರಿರುತ್ತಾರೆ. ರಾಜ್ಯದ ಸುಮಾರು
7,800 ಸ್ಥಳಗಳಲ್ಲಿ ಕಾರ್ಯಕ್ರಮ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಇದೇ ವೇಳೆ ಪ್ರತಿ ಬ್ಲಾಕ್ಮಟ್ಟದಲ್ಲಿ ಪಕ್ಷದ 50ಕ್ಕೂ ಹೆಚ್ಚು ಕಾರ್ಯಕರ್ತರು ಕೂಡಾ ಪ್ರತಿಜ್ಞೆ ಸ್ವೀಕರಿಸಲಿದ್ದಾರೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.