ADVERTISEMENT

ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2021, 19:05 IST
Last Updated 13 ಫೆಬ್ರುವರಿ 2021, 19:05 IST
ಪ್ರತಿಭಟನೆಯಲ್ಲಿ ಎಂ.ನಾರಾಯಣಸ್ವಾಮಿ ಮಾತನಾಡಿದರು. ಸಲೀಂ ಅಹ್ಮದ್, ರಾಮಲಿಂಗಾ ರೆಡ್ಡಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಇದ್ದಾರೆ
ಪ್ರತಿಭಟನೆಯಲ್ಲಿ ಎಂ.ನಾರಾಯಣಸ್ವಾಮಿ ಮಾತನಾಡಿದರು. ಸಲೀಂ ಅಹ್ಮದ್, ರಾಮಲಿಂಗಾ ರೆಡ್ಡಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಇದ್ದಾರೆ   

ಬೆಂಗಳೂರು: ಪೆಟ್ರೋಲ್, ಡೀಸೆಲ್‌, ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆ ಏರಿಕೆ ಖಂಡಿಸಿ ವಿರೋಧಿಸಿ ಕೆಪಿಸಿಸಿಯ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಘಟಕವು ಯಶವಂತಪುರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು. ಬಿಜೆಪಿ ಸರ್ಕಾರವು ರೈತ ವಿರೋಧಿ ಕಾನೂನುಗಳನ್ನು ಜಾರಿಗೊಳಿಸಿದೆ ಎಂದೂ ಪ್ರತಿಭಟನಾಕಾರರು ಆರೋಪಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್,‘ಕೇಂದ್ರ ಸರ್ಕಾರ ತೈಲ ದರ ಹಾಗೂ ದೈನಂದಿನ ಬಳಕೆಯ ಅಗತ್ಯ ವಸ್ತುಗಳ ದರಗಳನ್ನು ಹೆಚ್ಚಳ ಮಾಡುವ ಮೂಲಕ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಮತ್ತೊಂದೆಡೆ ರೈತ ವಿರೋಧಿ ಕಾಯ್ದೆಗಳ ಮೂಲಕ ಅನ್ನದಾತರನ್ನು ಬೀದಿಗೆ ತಂದಿದೆ’ ಎಂದು ಆರೋಪಿಸಿದರು.

‘ರೈತರು ಎರಡು ತಿಂಗಳಿನಿಂದ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಆದರೂ ಕೇಂದ್ರ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ರೈತರನ್ನೇ ಲೇವಡಿ ಮಾಡುತ್ತಿದ್ದಾರೆ. ಪಟ್ರೋಲ್‌ ತೈಲ ದರ ಹಾಗೂ ದಿನಬಳಕೆ ವಸ್ತುಗಳ ದರಗಳನ್ನು ಕೂಡಲೇ ಇಳಿಸಬೇಕು. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

ADVERTISEMENT

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ‘ಬಿಜೆಪಿಯು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನೂ ಪ್ರಧಾನಿ ನರೇಂದ್ರ ಮೋದಿ ಈಡೇರಿಸಿಲ್ಲ.ಸುಳ್ಳು ಆಶ್ವಾಸನೆ ಕೊಟ್ಟು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ದೂರಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಎಂ.ನಾರಾಯಣಸ್ವಾಮಿ ಪಕ್ಷದ ಮುಖಂಡರಾದ ಕೆಂಗಲ್‌ ಶ್ರೀಪಾದ ರೇಣು, ವಿ.ಎಸ್.ಆರಾಧ್ಯ, ಸೂರಜ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.